ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಪಾವತಿ ಸುದ್ದಿ ಹಾಗೂ ಆಯೋಗದ ಮಾರ್ಗಸೂಚಿ ಅನುಸಾರ ಸಾಮಾಜಿಕ ಜಾಲತಾಣ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೇಲೆ ತೀವ್ರ ನಿಗಾವಹಿಸುವಂತೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಮಾದರಿ ನೀತಿಸಂಹಿತೆ ಅನುಷ್ಠಾನ ಹಿನ್ನೆಲೆಯಲ್ಲಿ ರಚಿಸಲಾದ ಮಾಧ್ಯಮ ಪ್ರಮಾಣೀಕರಣ ಹಾಗೂ ನಿರ್ವಹಣಾ ಸಮಿತಿ, ಎಂಸಿಸಿ, ಸಾಮಾಜಿಕ ಜಾಲತಾಣ ನಿಗಾ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಕೇಬಲ್ ಚಾನಲ್ಗಳಲ್ಲಿ ಯಾವುದೇ ರಾಜಕೀಯ ಸುದ್ದಿಗಳು, ವಿಡಿಯೊ, ಸ್ಕಾಲಿಂಗ್ ಅಥವಾ ಜಾಹೀರಾತುಗಳನ್ನು ಪ್ರಸಾರ ಮಾಡುವ ಮುನ್ನ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ಮುಂದೆ ವಿಡಿಯೊ ಹಾಗೂ ಜಾಹೀರಾತು ತುಣುಕುಗಳನ್ನು ಸಲ್ಲಿಸಿ ಪ್ರಮಾಣಪತ್ರ ಪಡೆಯಬೇಕಾಗಿದೆ. ಆಡಿಯೊ ಅಥವಾ ವಿಡಿಯೊ ಮುದ್ರಿತ ಪ್ರಸಾರದ ಮುನ್ನ ಸಮಿತಿಯಿಂದ ಪರಿಶೀಲನೆಗೆ ಒಪ್ಪಿಸಿ ಅನುಮತಿ ಪಡೆಯಬೇಕು. ಅನುಮತಿ ಪಡೆದ ಪ್ರಚಾರ ಸಾಮಗ್ರಿಗಳನ್ನು ಮಾತ್ರ ಪ್ರಚಾರಕ್ಕೆ ಬಳಸಿಕೊಳ್ಳಬೇಕು ಎಂದು ಹೇಳಿದರು.
ಮೊಬೈಲ್ ಎಸ್.ಎಂ.ಎಸ್., ಇ– ಪೇಪರ್, ಯೂಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಂ, ಟ್ವಿಟರ್ಗಳಿಗೂ ಈ ನಿಯಮ ಅನ್ವಯಿಸುತ್ತದೆ. ಅಪ್ಲೋಡಿಗೂ ಮುನ್ನ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು, ಪ್ರಚಾರ ಸಾಮಗ್ರಿಗಳ ಮುದ್ರಣ ಹಾಗೂ ಕೇಬಲ್ ಪ್ರಸಾರ ಕುರಿತಂತೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರದ ಅಧಿಕಾರಿ ಬಿ.ಹೆಗಡೆ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಿಶ್ವನಾಥ ಪಾಟೀಲ, ಉಪನ್ಯಾಸಕ ಅರವಿಂದ ಐರಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.