ಶಿಗ್ಗಾವಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ ಹಾಗೂ ಸಂಗಮೇಶ ಕಂಬಾಳಿಮಠ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಪಟ್ಟಣದಲ್ಲಿ ಭಾನುವಾರ ಪಂಜಿನ ಮೆರವಣಿಗೆ ನಡೆಸಿದರು.
ಪಟ್ಟಣದ ಪುರಸಭೆ ಬಳಿಯ ಕಿತ್ತೂರ ಚನ್ನಮ್ಮ ವೃತ್ತದಿಂದ ಆರಂಭವಾದ ಪಂಜಿನ ಮೆರವಣಿಗೆ, ಸಂತೆ ಮೈದಾನ, ಪೇಟೆ ರಸ್ತೆ, ಈಶ್ವರ ದೇವಸ್ಥಾನ ರಸ್ತೆ, ಹಳೇ ಬಸ್ ನಿಲ್ದಾಣ, ಪಿಎಲ್ಡಿ ಬ್ಯಾಂಕ್ ವೃತ್ತ ಹಾಗೂ ಸುತ್ತಮುತ್ತಲಿನ ವಿವಿಧ ರಸ್ತೆಗಳಲ್ಲಿ ಸಾಗಿತು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಬೆಂಬಲಿಗರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ ವಿರುದ್ಧ ಘೋಷಣೆ ಕೂಗಿದರು
‘ಬಿಜೆಪಿ ಸೋಲಿಗೆ ಶ್ರೀಕಾಂತ ದುಂಡಿಗೌಡ್ರ ಹಾಗೂ ಸಂಗಮೇಶ ಕಂಬಾಳಿಮಠ ಕಾರಣವೆಂದು ಉಚ್ಚಾಟಿಸಿದ್ದಾರೆ. ಆದರೆ, ಇವರಿಬ್ಬರು ಪಕ್ಷದ ಸಂಘಟನೆಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ, ಪಕ್ಷದಲ್ಲಿ ಇದ್ದಕೊಂಡು ಅನೇಕರು ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಅಂತಹವರ ವಿರೋಧ ಪಕ್ಷ ಕ್ರಮ ಕೈಗೊಳ್ಳಬೇಕು’ ಎಂದು ಬೆಂಬಲಿಗರು ಆಗ್ರಹಿಸಿದರು.
‘ಶ್ರೀಕಾಂತ ದುಂಡಿಗೌಡ್ರ ಮತ್ತು ಸಂಗಮೇಶ ಕಂಬಾಳಿಮಠ, ಉಪ ಚುನಾವಣೆ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಮನೆ ಬಿಟ್ಟು ಹೊರಗೆ ಬಂದಿಲ್ಲ. ಚುನಾವಣೆಯಿಂದ ದೂರ ಉಳಿದುಕೊಂಡಿದ್ದರು. ಇವರನ್ನು ಉಚ್ಛಾಟನೆ ಮಾಡಿರುವುದು ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.