Manjunath C.
ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಕೃಷ್ಣ ಬಿ. ಗುಡಗೇರಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶನಿವಾರ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ನವನಗರದ ರಾಮಕೃಷ್ಣ ಅವರು 2010ರಲ್ಲಿ ಪಿಡಿಒ ಆಗಿ ನೇಮಕಗೊಂಡಿದ್ದರು. ಹಲವು ಪಂಚಾಯಿತಿಗಳಲ್ಲಿ ಕೆಲಸ ಮಾಡಿ, ಕೆಲ ವರ್ಷಗಳಿಂದ ಬಾಡ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದರು.
ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪ ಬರುತ್ತಿದ್ದಂತೆ ಲೋಕಾಯುಕ್ತ ಪೊಲೀಸರು, ಶನಿವಾರ ನಸುಕಿನಲ್ಲಿ ಬಾಡ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಹುಬ್ಬಳ್ಳಿಯ ನವನಗರದಲ್ಲಿರುವ ರಾಮಕೃಷ್ಣ ಅವರ ಮನೆ ಮೇಲೆ ದಾಳಿ ಮಾಡಿದ್ದರು.
ದಾಳಿ ಸಂದರ್ಭದಲ್ಲಿ ನಗದು, ಚಿನ್ನಾಭರಣ, ಚರಾಸ್ತಿಗೆ ಸಂಬಂಧಪಟ್ಟ ದಾಖಲೆಗಳು ಪತ್ತೆಯಾಗಿವೆ. ಪಿಡಿಒ ರಾಮಕೃಷ್ಣ, ತಮ್ಮ ಆದಾಯಕ್ಕಿಂತ ಶೇ 138ರಷ್ಟು ಅಕ್ರಮ ಆಸ್ತಿ ಹೊಂದಿರುವುದು ಲೋಕಾಯುಕ್ತ ಪೊಲೀಸರ ಪರಿಶೀಲನೆಯಿಂದ ಗೊತ್ತಾಗಿದೆ
‘ರಾಮಕೃಷ್ಣ ಅವರ ಬಳಿ ₹ 79,500 ನಗದು, ₹ 8.53 ಲಕ್ಷ ಮೌಲ್ಯದ ಚಿನ್ನಾಭರಣ ಸಿಕ್ಕಿದೆ. ಜೊತೆಗೆ, ಹುಬ್ಬಳ್ಳಿ–ಧಾರವಾಡದಲ್ಲಿ ಎರಡು ನಿವೇಶನ ಸೇರಿದಂತೆ ₹ 86.15 ಲಕ್ಷ ಮೌಲ್ಯದ ಸ್ಥಿರಾಸ್ತಿಯೂ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.