ADVERTISEMENT

ಮೊದಲು ಜಾಗೃತಿ, ನಂತರ ದಂಡ

ಮಾಸ್ಕ್‌ ದಿನದ ಅಂಗವಾಗಿ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 13:25 IST
Last Updated 18 ಜೂನ್ 2020, 13:25 IST
ಹಾವೇರಿ ನಗರದಲ್ಲಿ ಗುರುವಾರ ‘ಮಾಸ್ಕ್‌ ದಿನ’ದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಚಾಲನೆ ನೀಡಿದರು  –ಪ್ರಜಾವಾಣಿ ಚಿತ್ರ 
ಹಾವೇರಿ ನಗರದಲ್ಲಿ ಗುರುವಾರ ‘ಮಾಸ್ಕ್‌ ದಿನ’ದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಚಾಲನೆ ನೀಡಿದರು  –ಪ್ರಜಾವಾಣಿ ಚಿತ್ರ    

ಹಾವೇರಿ: ‘ಕೊರೊನಾ ಸೋಂಕು ತಡೆಗಟ್ಟಲು ಮಾಸ್ಕ್‌ ಧರಿಸುವುದು ಅಗತ್ಯವಾಗಿದೆ. ಮೊದಲು ಜಾಗೃತಿ ಹಮ್ಮಿಕೊಳ್ಳಲಾಗುತ್ತಿದೆ ನಂತರ ಮಾಸ್ಕ ಧರಿಸದವರಿಗೆ ದಂಡ ಹಾಕಲು ಉದ್ದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.

ನಗರದಲ್ಲಿ ಗುರುವಾರ ‘ಮಾಸ್ಕ್‌ ದಿನ’ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಇಂಥದ್ದೇ ಮಾಸ್ಕ್‌ ಹಾಕಬೇಕೆಂಬ ಕಡ್ಡಾಯವಿಲ್ಲ. ಮನೆಯಲ್ಲಿಯೇ ಬಟ್ಟೆಯ ಮಾಸ್ಕ್ ತಯಾರಿಸಿಕೊಂಡು ಬಳಕೆ ಮಾಡಬಹುದು. ಈಗಾಗಲೇ ಮಾಸ್ಕ ಧರಿಸದೇ ನಿಯಮ ಉಲ್ಲಂಘಿಸಿದವರಿಗೆ ₹100 ದಂಡ ವಿಧಿಸಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಎಸ್.ಹಾವನೂರ ಮಾತನಾಡಿದರು.ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಅವರು ಪಿ.ಬಿ.ರಸ್ತೆ, ಎಂ.ಜಿ.ರಸ್ತೆಯ ಹಣ್ಣು, ಹೂವು, ಬೀದಿಯ ವ್ಯಾಪಾರಸ್ಥರಿಗೆ, ಕಾರ್ಮಿಕರಿಗೆ, ರೈತರಿಗೆ, ಸಾರ್ವಜನಿಕರಿಗೆ ಉಚಿತ ಮಾಸ್ಕ್‌ ವಿತರಿಸಿ, ಮಾಸ್ಕ್ ಧರಿಸುವ ಅಗತ್ಯತೆ ಕುರಿತಂತೆ ಜಾಗೃತಿ ಮೂಡಿಸಿದರು.

ADVERTISEMENT

ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ಜಾಗೃತಿ ಫಲಕ ಹೊತ್ತು ಜಿಲ್ಲಾ ಆಸ್ಪತ್ರೆ, ಹೊಸಮನಿ ಸಿದ್ದಪ್ಪ ವೃತ್ತ, ಜೆ.ಪಿ.ವೃತ್ತ ಮಾರ್ಗವಾಗಿ ಗಾಂಧಿ ವೃತ್ತದವರೆಗೆ ಘೋಷಣೆಗಳೊಂದಿಗೆ ಸಂಚರಿಸಿ ಸಮಾಪ್ತಿಗೊಳಿಸಿದರು. ರೆಡ್ ಕ್ರಾಸ್ ಸ್ವಯಂ ಸೇವಕರು, ಸಾರ್ವಜನಿಕರಿಗೆ ಮೆರವಣಿಗೆಯುದ್ದಕ್ಕೂ ಉಚಿತವಾಗಿ ಮಾಸ್ಕ್ ಹಂಚಿದರು.

ಎಸ್ಪಿ ಕೆ.ಜಿ.ದೇವರಾಜ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ತಹಶೀಲ್ದಾರ್‌ ಶಂಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.