ADVERTISEMENT

‘ ಹಾವೇರಿ ಜಿಲ್ಲೆಗೆ ಪ್ರವಾಸಿಗರ ಆಕರ್ಷಿಸಲು ಕ್ರಮ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 13:47 IST
Last Updated 4 ಅಕ್ಟೋಬರ್ 2021, 13:47 IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಉದ್ಘಾಟಿಸಿದರು. ಪ್ರವಾಸೋದ್ಯಮ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಇದ್ದಾರೆ 
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಉದ್ಘಾಟಿಸಿದರು. ಪ್ರವಾಸೋದ್ಯಮ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಇದ್ದಾರೆ    

ಹಾವೇರಿ: ‘ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅಪರಿಮಿತ ಅವಕಾಶಗಳಿವೆ. ಪ್ರವಾಸಕ್ಕೆ ಅಗತ್ಯ ಸಾರಿಗೆ, ವಸತಿ ಹಾಗೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರೆ ಪ್ರವಾಸಿಗರನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಡಿಜಿಟಲ್ ಡಿಸ್‌ಪ್ಲೇ ಹಾಗೂ ಕಲಾವಿದರಿಂದ ಪ್ರಚಾರ ಕೈಗೊಳ್ಳಲಾಗುವುದು. ಚುನಾವಣೆ ನೀತಿಸಂಹಿತೆ ಮುಗಿದ ನಂತರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಚರ್ಚಿಸಿ ಪ್ರವಾಸೋದ್ಯಮ ವಿಜನ್ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಶಿಶುವಿನಹಾಳ ಅಭಿವೃದ್ಧಿಗೆ ಈಗಾಗಲೇ ಒಂದು ಕೋಟಿ ಮಂಜೂರಾಗಿದ್ದು, ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ ಕಾಗಿನೆಲೆ ಅಭಿವೃದ್ಧಿಪಡಿಸಲಾಗಿದೆ. ಸರ್ವಜ್ಞ ಪೀಠದ ಕೆಲಸ ಸದ್ಯದಲ್ಲೇ ಆರಂಭಿಸಲಾಗುವುದು. ಒಟ್ಟಾರೆ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ADVERTISEMENT

ನಮ್ಮ ಹಿರಿಯರು ಹೇಳಿದಂತೆ ‘ಕೋಶ ಓದಬೇಕು ದೇಶ ಸುತ್ತಬೇಕು’. ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವುದರಿಂದ ಆ ಪ್ರದೇಶಗಳ ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಗೀತ ಪರಿಚಯವಾಗುತ್ತದೆ. ಇದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಪ್ರವಾಸೋದ್ಯಮ ಆರ್ಥಿಕ ಅಭಿವೃದ್ಧಿ ಜೊತೆಗೆ ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಇದ್ದರು. ಬಸವರಾಜ ಶಿಗ್ಗಾವಿ ಮತ್ತು ತಂಡದವರು ರೈತ ಗೀತೆ ಹಾಗೂ ರೇಖಾ ಕುಲಕರ್ಣಿ ಮತ್ತು ತಂಡದವರು ವಚನ ಗಾಯನ ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.