ಹಾವೇರಿ: ಮಾಸಿಕ ಗೌರವ ಧನ ₹12 ಸಾವಿರಕ್ಕೆ ಹೆಚ್ಚಳ ಮಾಡಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ರಾಜೇಂದ್ರ ದೊಡ್ಡಮನಿ ಅವರಿಗೆ ಮನವಿ ಸಲ್ಲಿಸಿದರು.
ಪ್ರೋತ್ಸಾಹ ಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ಮಾಸಿಕ ಒಂದೇ ನಿಶ್ಚಿತ ಗೌರವಧನ ₹12 ಸಾವಿರವನ್ನು ಪ್ರತಿ ತಿಂಗಳು ನೀಡಬೇಕು. ಕೊರೊನಾ ಸೋಂಕು ನಿಯಂತ್ರಿಸಲು ಅಮೂಲ್ಯವಾದ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯವನ್ನು ರಕ್ಷಿಸುವ, ಸೋಂಕಿತ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ ನೀಡುವ ಮತ್ತು ಎಲ್ಲಾ ರಕ್ಷಣಾ ಸಾಮಗ್ರಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇಂದಿನಿಂದ 7 ದಿನ ಜನಪ್ರತಿನಿಧಿಗಳಿಗೆ ಮನವಿಪತ್ರ ಕೊಡುವ ಹಾಗೂ ವಿವಿಧ ರೀತಿಯ ಪ್ರತಿಭಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಅವಧಿಯಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಜುಲೈ 10ರಿಂದ ರಾಜ್ಯದಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯ ಎಲ್ಲಾ ಕೆಲಸಗಳನ್ನು ನಿಲ್ಲಿಸಲಿದ್ದಾರೆ ಮತ್ತು ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸರ್ಕಾರ ಮತ್ತು ಇಲಾಖೆಯ ಗಮನಕ್ಕೆ ತರುತ್ತಿದ್ದೇವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಘಟಕದ ಅಧ್ಯಕ್ಷೆ ಜಯಶೀಲಾ ಬಂಕಾಪುರಮಠ, ಮುಖಂಡರಾದ ಚೇತನಾ ಹಿರೇಮಠ, ರೇಶ್ಮಾ ಗಿರಣಿ, ಪುಷ್ಪಾ ಮಡ್ಲೂರಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.