ಬ್ಯಾಡಗಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಮೊದಲ ಮಹಡಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನದಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಕೊಠಡಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರ ಜನಸಂಪರ್ಕ ಕೊಠಡಿಗಳನ್ನು ನಿರ್ಮಿಸಿ ಪ್ರತಿಯೊಂದು ಟೇಬಲ್ಗೂ ಧ್ವನಿವರ್ಧಕಗಳನ್ನು ಅಳವಡಿಸಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯ ಮೊದಲ ಮಹಡಿಯಲ್ಲಿ ಪಂಚಾಯತ್ ರಾಜ್ ಆಯುಕ್ತಾಲಯದ ಲೆಕ್ಕ ಶೀರ್ಷಿಕೆಯಡಿ ₹1.25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಭಾಭವನ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೆ ₹50ಲಕ್ಷ ಹಣ ಮಂಜೂರಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಯ ಉಸ್ತುವಾರಿಯನ್ನು ಜಿಲ್ಲಾ ನಿರ್ಮಿತಿ ಕೇಂದ್ರ ವಹಿಸಿಕೊಂಡಿದೆ. ಒಳ್ಳೆಯ ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ಮಾಡಬೇಕಾಗಿದೆ. ಕಳಪೆ ಎಂದು ಕಂಡು ಬಂದಲ್ಲಿ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಲು ಹಿಂಜರಿಯುವುದಿಲ್ಲ ಎಂದು ಸ್ಪಷ್ಠಪಡಿಸಿದರು.
ಹೊಸ ಕಟ್ಟಡ ನಿರ್ಮಾಣವಾದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗಲಿದೆ ಎಂದರು.
ಇಒ ಕೆ.ಎಂ.ಮಲ್ಲಿಕಾರ್ಜುನ, ಮುಖಂಡರಾದ ಚನ್ನಬಸಪ್ಪ ಹುಲ್ಲತ್ತಿ, ಶಂಭನಗೌಡ ಪಾಟೀಲ, ನೀಲಗಿರಿಯಪ್ಪ ಕಾಕೋಳ, ಮಾಲತೇಶ ಶಿಡ್ಲಣ್ಣನವರ, ವೀರನಗೌಡ ಮಲ್ಲಾಡದ, ಪ್ರಮೀಳಾ ಜೋಗುಳ, ಗುಡ್ಡಪ್ಪ ಬನ್ನಿಹಳ್ಳಿ, ರುದ್ರಣ್ಣ ಹೊಂಕಣ, ಬಸವರಾಜ ಬಳ್ಳಾರಿ, ಡಿ.ಎಚ್.ಬುಡ್ಡನಗೌಡ್ರ, ದುರ್ಗೇಶ ಗೋಣೆಮ್ಮನವರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.