ರಟ್ಟೀಹಳ್ಳಿ: ‘ನರೇಗಾ ಯೋಜನೆಯು ಸ್ಥಳೀಯ ಮಟ್ಟದಲ್ಲಿ ನಿರಂತರ ಉದ್ಯೋಗ ಕಲ್ಪಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ವರದಾನವಾಗಿದೆ’ ಎಂದು ತಾಲ್ಲೂಕು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಹೇಳಿದರು.
ತಾಲ್ಲೂಕಿನ ಮಕರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಗುಬ್ಬಿ, ಯಡಗೋಡ ಗ್ರಾಮದಲ್ಲಿ ಕೈಗೊಂಡ ‘ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ’ ವಿಶೇಷ ಅಭಿಯಾನದಲ್ಲಿ ಅವರು ಮಾತನಾಡಿದರು.
‘ಏಪ್ರಿಲ್ 1ರಿಂದ ಮೇ ಅಂತ್ಯದವರೆಗೆ ಈ ಅಭಿಯಾನ ನಡೆಸಲಾಗುತ್ತದೆ. ಕೂಲಿ ಆಧಾರಿತ ಕಾಮಗಾರಿಗಳನ್ನು ಸೃಜಿಸಿ ಹೆಚ್ಚಿನ ಜನರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಲಿಸುವ ಉದ್ದೇಶ ಇದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಲಸೆ ಪ್ರಮಾಣವನ್ನು ತಗ್ಗಿಸುವ ಮಹತ್ತರ ಯೋಜನೆಯಾಗಿದೆ’ ಎಂದರು.
‘ಈಗಾಗಲೇ ಮನೆ ಮನೆಗೆ ಭೇಟಿ ನೀಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗೆ ಬೇಡಿಕೆ ಪಡೆಯಲಾಗುತ್ತಿದೆ. ಅರ್ಹ ಕಾರ್ಮಿಕರು ಉದ್ಯೋಗ ಖಾತ್ರಿ ಕೆಲಸದಲ್ಲಿ ಪಾಲ್ಗೊಳ್ಳಬೇಕು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕೃಷಿ ಹೊಂಡ, ಬದು ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿ ಕೈಗೊಳ್ಳಲು ರೈತರಿಗೆ ಅವಕಾಶವಿದೆ’ ಎಂದು ತಿಳಿಸಿದರು.
ಹೂವಪ್ಪ ಹಿರೇಕೊಣತಿ, ಗೀತಾ ಎಲದಹಳ್ಳಿ, ಕಾಯಕಬಂಧು ಮಹೇಶ, ಗ್ರಾಮಸ್ಥರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.