ADVERTISEMENT

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ: ‘ಪ್ರಾಯೋಗಿಕ ಜಿಲ್ಲೆ’ಯಾಗಿ ಹಾವೇರಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 14:06 IST
Last Updated 2 ಜೂನ್ 2021, 14:06 IST
ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ   

ಹಾವೇರಿ: ‘ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ, ಮಿಶ್ರ ಬೆಳೆ ಪದ್ಧತಿಯನ್ನು ಪ್ರೋತ್ಸಾಹಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವಿದೆ. ಈ ಯೋಜನೆಗೆರಾಜ್ಯದಲ್ಲಿ ಹಾವೇರಿಯನ್ನು ‘ಪ್ರಾಯೋಗಿಕ ಜಿಲ್ಲೆ’ಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಏಕ ಬೆಳೆ ಪದ್ಧತಿಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಆದಾಯ ಹೆಚ್ಚಿಸಲು ಹಾವೇರಿ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್‌ನಲ್ಲಿ ಮಿಶ್ರ ಬೆಳೆಗೆ ಪ್ರೋತ್ಸಾಹ ನೀಡಲಾಗುತ್ತದೆ’ ಎಂದರು.

ಈ ಯೋಜನೆಯಡಿ 401 ಕ್ವಿಂಟಲ್‌ ತೊಗರಿ, 240 ಕ್ವಿಂಟಲ್‌ ಶೇಂಗಾ, 2,800 ಕ್ವಿಂಟಲ್‌ ಸೋಯಾ ಅವರೆ ಬಿತ್ತನೆ ಬೀಜ ಸೇರಿದಂತೆ ಒಟ್ಟು 2,441 ಕ್ವಿಂಟಲ್‌ ಬಿತ್ತನೆ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುವುದು. ಒಟ್ಟು ₹2.44 ಕೋಟಿ ಮೌಲ್ಯದ ಬಿತ್ತನೆ ಬೀಜವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ADVERTISEMENT

ಲಾಕ್‌ಡೌನ್‌ ವಿಸ್ತರಣೆ: ಜೂನ್ 5ರಂದು ನಿರ್ಧಾರ
ರಟ್ಟೀಹಳ್ಳಿ (ಹಾವೇರಿ):
‘ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ವಿಸ್ತರಣೆಯ ಕುರಿತು ಜೂನ್ 5ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಟ್ಟೀಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ,ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅರಿತುಕೊಳ್ಳಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್‌ಡೌನ್‌ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.