ADVERTISEMENT

ಹಾವೇರಿ: ಉದ್ಯೋಗ ಸೃಷ್ಟಿಸಲು ಡಿವೈಎಫ್‌ಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 14:11 IST
Last Updated 3 ಫೆಬ್ರುವರಿ 2022, 14:11 IST
ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಾವೇರಿ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಯಿತು
ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಾವೇರಿ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಯಿತು   

ಹಾವೇರಿ: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಸುವ ಹಾಗೂ ಜನಸಾಮಾನ್ಯರ ಕಲ್ಯಾಣದ ಹಿತಾಸಕ್ತಿಯ ಕಾರ್ಯನೀತಿ ಕೈಗೊಳ್ಳಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಮಾಡಿದ ನಂತರ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಯುವ ವಿರೋಧಿ ಬಜೆಟ್ ಅನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ತಿರಸ್ಕರಿಸುತ್ತದೆ. ಭಾರತದ ಯುವಜನತೆ ಉದ್ಯೋಗಗಳನ್ನು ಕಳೆದುಕೊಂಡಿದೆ ಮತ್ತು ಮುಂದಿನ ಹಣಕಾಸು ವರ್ಷದ ಬಜೆಟ್ ಪ್ರಸ್ತಾವನೆಗಳು ಯಾವುದೇ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶ ಹೊಂದಿಲ್ಲ. ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆ ಸ್ಥಾಪಿಸಬೇಕೆಂಬ ಬಡ ಜನರ ಹಕ್ಕೊತ್ತಾಯಕ್ಕೆ ಪ್ರಸ್ತುತ ಬಜೆಟ್ ನಲ್ಲಿ ಸ್ಪಂದಿಸಿಲ್ಲ ಎಂದು ದೂರಿದರು.

ADVERTISEMENT

ಹೆಚ್ಚಿನ ಪ್ರಮಾಣದ ನಿರುದ್ಯೋಗ ಮತ್ತು ಉದ್ಯೋಗ ನಷ್ಟದಿಂದ ಯುವಕರು ಭ್ರಮನಿರಸನಗೊಂಡಿರುವ ದೇಶದಲ್ಲಿ, ಕೇವಲ ವರ್ಚುವಲ್ ಹಣವನ್ನು ಉತ್ತೇಜಿಸುವ ಘೋಷಣೆಗಳು ಅಪರಾಧವಾಗಿದೆ. ಭಾರತದಲ್ಲಿ ಶೇ 10ರಷ್ಟು ಶ್ರೀಮಂತರು ದೇಶದ ಶೇ 75ರಷ್ಟು ಸಂಪತ್ತನ್ನು ಹೊಂದಿದ್ದಾರೆ. ಅವರು ಸಾಂಕ್ರಾಮಿಕ ಸಮಯದಲ್ಲಿಯೂ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದರು.

ಯುವಜನತೆಯ ಉದ್ಯೋಗದ ಕನಸುಗಳನ್ನು ನಾಶ ಮಾಡದೇ, ದೇಶದ ಎಲ್ಲ ಯುವಜನತೆಗೆ ಉದ್ಯೋಗ ಖಾತ್ರಿಗೊಳಿಸುವಂತೆ, ಉದ್ಯೋಗ ಸೃಷ್ಟಿಸಲು ಮುಂದಾಗಬೇಕೆಂದು ಡಿವೈಎಫ್ಐ ಜಿಲ್ಲಾ ಸಮಿತಿಯು ಆಗ್ರಹಿಸಿತು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ವಕೀಲರಾದ ನಾರಾಯಣ ಕಾಳೆ,
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ, ಮುಖಂಡರಾದ ಬಿರೇಶ ನೆಟಗಲ್ಲಣ್ಣನವರ, ಹೊನ್ನಪ್ಪ ತಳವಾರ, ವಿರೂಪಾಕ್ಷಯ್ಯ ಎಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.