ಹಾವೇರಿ: ‘ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲ ಪ್ರಕರಣಗಳನ್ನು ತೆಗೆದು ಹಾಕುತ್ತೇನೆ ಎಂದು ನಾನು ಹೇಳಿಲ್ಲ. ವಿಎಚ್ಪಿ ಮುಖಂಡರು ಮನವಿ ಪತ್ರ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಕೇಳಿದ್ದಾರೆ. ಯಾರಿಗೆ ಅನ್ಯಾಯವಾದರೂ ಸರಿಪಡಿಸುವ ಕೆಲಸ ನನ್ನದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದಿನ ಸರ್ಕಾರವೂ ಕೆಲವು ಸಂಘಟನೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆದಿದೆ. ಆದರೆ, ನಾವು ಕಾನೂನು ಪ್ರಕಾರವೇ ನ್ಯಾಯ ಒದಗಿಸುತ್ತೇವೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಕದಡುವ ಪೋಸ್ಟ್ಗಳನ್ನು ನಿಯಂತ್ರಿಸಲು, ಮುಂದಿನ ವಾರ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರ ಸಭೆ ಕರೆದಿದ್ದೇವೆ. ಪೋಸ್ಟ್ಗಳನ್ನು ಪರಿಶೀಲಿಸಿದ ನಂತರವೇ ಪ್ರಕಟಿಸಲು ಸೂಚನೆ ನೀಡುತ್ತೇವೆ. ಮುಖ್ಯಸ್ಥರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲೂ ಯುಪಿ ಮಾದರಿ ಅನುಸರಿಸುತ್ತೀರಾ ಎಂಬ ಪ್ರಶ್ನೆಗೆ, ‘ಗಲಭೆಕೋರರು ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ, ಅವರಿಂದಲೇ ನಷ್ಟದ ಪರಿಹಾರವನ್ನು ವಸೂಲಿ ಮಾಡುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಮಾರ್ಗಸೂಚನೆ ಕೊಟ್ಟಿದೆ. ಅದರಂತೆ, ನಷ್ಟ ಪರಿಹಾರ ವಸೂಲಿ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
‘ಡಿ.ಕೆ. ಶಿವಕುಮಾರ್ ಅವರಿಗೆ ಈ ನೆಲದ ಕಾನೂನು ಗೊತ್ತಿದೆ ಎಂದು ಭಾವಿಸುತ್ತೇನೆ. ಕಾನೂನು ಪ್ರಕಾರ ಗಲಭೆಯಲ್ಲಿ ಪಾಲ್ಗೊಂಡವರಿಗೆ ನೋಟಿಸ್ ಕೊಟ್ಟು, ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದೇವೆ. ನೋಟಿಸ್ ಕೊಟ್ಟು ಯಾರನ್ನೂ ಹೆದರಿಸುವ ಪ್ರಶ್ನೆಯೇ ಇಲ್ಲ’ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ 4 ಎನ್ಡಿಆರ್ಎಫ್ ತಂಡಗಳಿವೆ. ಹೆಚ್ಚುವರಿಯಾಗಿ ಇನ್ನೂ ನಾಲ್ಕು ತಂಡಗಳನ್ನು ಕಳುಹಿಸಿಲು ಕೇಂದ್ರ ಒಪ್ಪಿಗೆ ನೀಡಿದೆ.ಅಂತರರಾಜ್ಯ ಮಟ್ಟದಲ್ಲಿ ಪ್ರವಾಹ ನಿರ್ವಹಣೆಗೆ ‘ಕ್ವಿಕ್ ರೆಸ್ಪಾನ್ಸ್ ಸಿಸ್ಟಮ್’ ಅನುಷ್ಠಾನಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.