ADVERTISEMENT

‘ತಂಬಾಕು ಮುಕ್ತ ಕ್ಯಾಂಪಸ್‌’ ಘೋಷಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 14:53 IST
Last Updated 6 ಏಪ್ರಿಲ್ 2021, 14:53 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪಾಲ್ಗೊಂಡಿದ್ದರು  
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪಾಲ್ಗೊಂಡಿದ್ದರು     

ಹಾವೇರಿ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ‘ತಂಬಾಕು ಮುಕ್ತ ಕ್ಯಾಂಪಸ್’ ಎಂದು ಘೋಷಣೆ ಮಾಡಿ ವಾರದೊಳಗೆ ವರದಿ ಮಾಡುವಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಾಕೀತು ಮಾಡಿದ್ದಾರೆ.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ಅವರು, ಕೆಲಸದ ಸಮಯದಲ್ಲಿ ಗ್ರಾಮ ಪಂಚಾಯಿತಿ ಕಚೇರಿಗಳು ಒಳಗೊಂಡಂತೆ ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ತಂಬಾಕು ಸೇವನೆ ಮುಕ್ತ ಕ್ಯಾಂಪಸ್ ಎಂದು ಘೋಷಣೆ ಮಾಡಿ ನಾಮಫಲಕ ಅಳವಡಿಸಬೇಕು. ಎಲ್ಲ ಇಲಾಖಾ ಮುಖ್ಯಸ್ಥರು ಘೋಷಣೆ ಮಾಡಿದ ದೃಢೀಕರಣವನ್ನು ಜಿಲ್ಲಾಧಿಕಾರಿಗೆ ಲಿಖಿತವಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ, ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಬೀಡಿ- ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಸೇವನೆ ನಿಯಮ ಬಾಹಿರವಾಗಿದೆ.ಶಾಲೆಗೆ ಹೊಂದಿಕೊಂಡಂತಿರುವ ಅಂಗಡಿಗಳಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದರೆ ಈ ಕುರಿತಂತೆ ಜಾಗೃತಿ ಮೂಡಿಸಿ ದಂಡ ವಿಧಿಸಬೇಕು. ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು ಶಾಲಾ-ಕಾಲೇಜು ಆವರಣದಿಂದ ತಂಬಾಕು ಮಾರಾಟಮಾಡುವ ಅಂಗಡಿಗಳನ್ನು ಸ್ಥಳಾಂತರಿಸಲು ಕ್ರಮವಹಿಸಿ ಎಂದು ಸೂಚಿಸಿದರು.

ADVERTISEMENT

ನಗರ ಸ್ಥಳೀಯ ಸಂಸ್ಥೆಗಳು ಬೆಳಗಿನ ಕಸ ವಿಲೇವಾರಿ ವಾಹನದ ಧ್ವನಿವರ್ಧಕದ ಮೂಲಕ ತಂಬಾಕಿನ ದುಷ್ಪರಿಣಾಮಗಳ ಕುರಿತಂತೆ ಜಾಗೃತಿ ಮೂಡಿಸಲು ಕ್ರಮವಹಿಸಬೇಕು.ಬೀಡಿ ಕಟ್ಟುವ ಉದ್ಯಮದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುವ ಜನರಿಗೆ ಪರ್ಯಾಯ ಉದ್ಯೋಗವಕಾಶಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಚ್. ರಾಘವೇಂದ್ರಸ್ವಾಮಿ, ಕೋಟ್ಪಾ ನೋಡಲ್ ಅಧಿಕಾರಿ ಡಾ.ಜಗದೀಶ ಪಾಟೀಲ, ಡಾ.ಸಂತೋಷ ದಿಡ್ಡಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅಡಿಗ, ಔಷಧ ನಿಯಂತ್ರಣಾಧಿಕಾರಿ ನೀಲಿಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.