ಹಾವೇರಿ: ಬಿಜೆಪಿ ಆಡಳಿತರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಲೇ ಹೊರಟಿವೆ. ಈ ರೈತ ವಿರೋಧಿ ಬಿಜೆಪಿ ಸರ್ಕಾರಗಳ ವಿರುದ್ದ ಸೆ.12ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಕರೆಯಲಾಗಿದೆ. ಇದಕ್ಕೆ ಬೆಂಬಲ ವ್ಯಕ್ತಪಡಿಸಿ, ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸುಮಾರು 500ಕ್ಕೂ ಹೆಚ್ಚು ರೈತರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ತಿಳಿಸಿದ್ದಾರೆ.
ಈಗಾಗಲೇ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಹೋರಾಟ ಫಲವಾಗಿ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರ ಇಲ್ಲಿಯವರೆಗೆ ರದ್ದುಪಡಿಸಿಲ್ಲ. ಈಗ ಖಾಸಗಿ ವಿದ್ಯುತ್ ಬಿಲ್ ಜಾರಿ ಮಾಡಲು ಹೊರಟಿದ್ದಾರೆ. ಬೆಳೆ ವಿಮೆ ಅವೈಜ್ಞಾನಿಕ, ರಾಜ್ಯದಲ್ಲಿ ಪ್ರವಾಹ ಉಂಟಾಗಿ ರೈತರ ಜೀವನ ಅಕ್ಷರಶಃ ನಾಶವಾಗಿವೆ. ಇದೆಲ್ಲವನ್ನು ರಾಜ್ಯ ಮತ್ತು ಕೇಂದ್ರ ಸರಕಾರ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.
ರೈತರ ವಿವಿಧ ಬೇಡಿಕೆ ಈಡೆರಿಸುವಂತೆ ಸೆ.12ರಂದು ಬೆಂಗಳೂರನಲ್ಲಿ ಬೃಹತ್ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ರೈತ ಪದಾಧಿಕಾರಿಗಳು, ಸದಸ್ಯರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಹಾವೇರಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ, ಮುತ್ತಣ್ಣ ಗುಡಗೇರಿ, ಚನ್ನಪ್ಪ ಮರಡೂರ, ರಾಜು ತರ್ಲಗಟ್ಟ, ಸಿದ್ದಪ್ಪ ಬ್ಯಾತನಾಳ, ಉಪಾಧ್ಯಕ್ಷರಾದ ಭುವನೇಶ್ವರಿ ಶಿಡ್ಲಾಪುರ, ನೂರ್ ಅಹ್ಮದ್ ಮುಲ್ಲಾ, ಕರಬಸಪ್ಪ ಜಟ್ಟಪ್ಪನವರ, ಸತೀಶ ದೇಸೂರ, ಗೋಣೇಪ್ಪ ಕರಿಗಾರ, ಜಗದೀಶ ಬಳ್ಳಾರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.