ADVERTISEMENT

ಸರ್ಕಾರ ದಿವಾಳಿ: ಜಗದೀಶ ಶೆಟ್ಟರ್‌ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 16:06 IST
Last Updated 14 ಆಗಸ್ಟ್ 2024, 16:06 IST
ಎಸ್‌.ಆರ್‌.ಪಾಟೀಲ
ಎಸ್‌.ಆರ್‌.ಪಾಟೀಲ   

ಬ್ಯಾಡಗಿ: ವಿವಿಧ ಭಾಗ್ಯಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್‌ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿಕೆಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌.ಆರ್‌. ಪಾಟೀಲ ಖಂಡಿಸಿದ್ದಾರೆ.

ಪಟ್ಟಣದ ಕಾಂಗ್ರೆಸ್‌ ಸಭಾಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 110 ಲಕ್ಷ ಲಕ್ಷ ಕುಟುಂಬಗಳು ಅನ್ನಭಾಗ್ಯ, ಗ್ರಾಮೀಣ ಪ್ರದೇಶದಲ್ಲಿ ಶೇ 97, ಪಟ್ಟಣ ಪ್ರದೇಶದಲ್ಲಿ ಶೇ77ರಷ್ಟು ಕುಟುಂಬಗಳು ಗೃಹಜ್ಯೋತಿ ಯೋಜೆಯ ಪ್ರಯೋಜನ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ 160 ಕೋಟಿ ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದು, ಗೃಹಲಕ್ಷ್ಮಿಯೋಜನೆಯಲ್ಲಿ 112 ಲಕ್ಷ ಕುಟುಂಬಗಳು ಲಾಭ ಪಡೆಯುತ್ತಿವೆ. 2023ರಲ್ಲಿ ಒಟ್ಟು ₹38 ಸಾವಿರ ಕೋಟಿ ಖರ್ಚುಮಾಡಲಾಗಿದ್ದು, ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ₹60 ಸಾವಿರ ಕೋಟಿ ಹಣ ತೆಗೆದಿರಿಸಿದೆ ಎಂದು ಹೇಳಿದರು.

ADVERTISEMENT

ಬಿಜೆಪಿ ಸರ್ಕಾರ ಲೋಕೋಪಯೋಗಿ ಇಲಾಖೆಯಲ್ಲಿ ಹಣವಿಲ್ಲದೆ ವಿವಿಧ ಕಾಮಗಾರಿಗಳಿಗೆ ₹18 ಸಾವಿರ ಕೋಟಿ ಮಂಜೂರಾತಿ ನೀಡಿದ್ದಾರೆ. ಈ ಮೂಲಕ ಆರ್ಥಿಕ ವ್ಯವಸ್ಥೆ ಖಂಡಿಸಿದ್ದಾರೆ ಎಂದು ಆರೋಪಿಸಿದ ಅವರು, ಅದನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಂತಿದೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.