ಹಾವೇರಿ: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧವಾಗಬೇಕು ಎಂದು ಮಹಿಳೆಯರು 6 ವರ್ಷಗಳಿಂದ ನಿರಂತವಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ರಾಜ್ಯದ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿರಾಂತಕವಾಗಿ ನಡೆಯುತ್ತಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ‘ಮದ್ಯ ನಿಷೇಧ ಆಂದೋಲನ– ಕರ್ನಾಟಕ’ ಸಂಘಟನೆ ಸದಸ್ಯರು ಆಗ್ರಹಿಸಿದರು.
ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದ ಮಹಿಳೆಯರು ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಘೋಷಣೆಗಳನ್ನು ಕೂಗಿದರು.
ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಆದರೂ ಈ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಹೈಕೋರ್ಟ್ ಆದೇಶವನ್ನು ಸರ್ಕಾರ 15 ದಿನಗಳ ಒಳಗಾಗಿ ಕಾರ್ಯರೂಪಕ್ಕೆ ತಂದು, ಅಕ್ರಮ ಮದ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯೆ ಹಸೀನಾ ಹೆಡಿಯಾಲ, ಗಂಗಮ್ಮ, ಯಲ್ಲಮ್ಮ ಎಂ.ಡಿ., ಕಾಂತಮ್ಮ ಜಿ.ಡಿ., ಬಸವರಾಜು, ರಮೇಶ ಕಟ್ಟೀಮನಿ, ಸುಭಾಸ ಸೋಮಸಾಗರ, ವಿನಯ ಪಾಟೀಲ, ನಿಂಗರಾಜ ಓಲೇಕಾರ, ಪಾರ್ವತಿ ಚಿಕ್ಕೆರೂರ, ಸತೀಶ ಕೊಲ್ಲಾಪುರ, ಬಸವರಾಜ ಹೊಸಮನಿ, ಜಯಮ್ಮ ಕನವಳ್ಳಿಮಠ, ಶಾರದಾ, ರೇಖಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.