ADVERTISEMENT

ಒಳ ಮೀಸಲಾತಿ ಪಾಲಿಸದಿದ್ದರೆ ಹೋರಾಟ: ಗವಿಸಿದ್ದಪ್ಪ ದ್ಯಾಮಣ್ಣವರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 5:32 IST
Last Updated 4 ಮಾರ್ಚ್ 2026, 5:32 IST
   

ಹಾವೇರಿ: ‘ರಾಜ್ಯ ಸರ್ಕಾರವು 56,342 ಹುದ್ದೆ ಭರ್ತಿಗೆ ಮುಂದಾಗಿದೆ. ಈ ನೇಮಕಾತಿಯಲ್ಲಿ ಒಳ ಮೀಸಲಾತಿ ಪಾಲಿಸಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಎಚ್ಚರಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳ ಮೀಸಲಾತಿ ಜಾರಿಗೆ ಸುಮಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಈಗ ಒಳ ಮೀಸಲಾತಿ ಜಾರಿ ಹಂತದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ ಮೀಸಲಾತಿಯನ್ನು ತ್ವರಿತವಾಗಿ ಜಾರಿಗೊಳಿಸಿ ನಮಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಒಳ ಮೀಸಲಾತಿ ಜಾರಿ ಹೋರಾಟ ಮಾಡುತ್ತಲೇ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಆಯೋಗಗಳು, ಸುಪ್ರೀಂಕೋರ್ಟ್, ರಾಜ್ಯಪಾಲರು ಸಹ ಒಳ ಮೀಸಲಾತಿ ಜಾರಿ ಮಾಡುವಂತೆ ಹೇಳಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುತ್ತಿಲ್ಲ. ಈಗ ಏಕಾಏಕಿ ನೇಮಕಾತಿ ಮಾಡುವುದಾಗಿ ಹೇಳಿದೆ. ಒಳ ಮೀಸಲಾತಿ ಕೈಬಿಟ್ಟು ನೇಮಕಾತಿ ಮಾಡಿದರೆ, ನಾವು ಸುಮ್ಮನಿರುವುದಿಲ್ಲ. ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುವುದು ನಿಶ್ಚಿತ’ ಎಂದು ಎಚ್ಚರಿಸಿದರು.

ADVERTISEMENT

ರಾಜ್ಯ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್ ಮಾಳಗಿ ಮಾತನಾಡಿ, ‘ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುತ್ತಿಲ್ಲ. ಜಾಡಿಕೋರರ ಮಾತು ಕೇಳಿಕೊಂಡು, ಸುಮ್ಮನಾಗಿದ್ದಾರೆ. ಈಗ ಹೊಸ ನೇಮಕಾತಿ ಮೂಲಕ ಪುನಃ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಸಮುದಾಯದವರ ಜೊತೆಯಲ್ಲಿ ಚೆಲ್ಲಾಟ ಆಡಬಾರದು. ನಮಗೆ ಸಿಗಬೇಕಾದ ಒಳ ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು. ಅದರ ಪ್ರಕಾರವೇ ಹೊಸ ನೇಮಕಾತಿ ನಡೆಸಬೇಕು. ಇಲ್ಲದಿದ್ದರೆ, ಹೋರಾಟ ಅನಿವಾರ್ಯ’ ಎಂದರು.

ಮುಖಂಡ ಎಂ. ಆಂಜನೇಯ ಮಾತನಾಡಿ, ‘ರಾಜ್ಯ ಸರ್ಕಾರವು 56,342 ಹುದ್ದೆಗಳ ನೇಮಕಾತಿ ಮಾಡುತ್ತಿದೆ. ಒಳ ಮೀಸಲಾತಿ ಪ್ರಕಾರ ನಮ್ಮ ಸಮುದಾಯಕ್ಕೆ 3,395 ಹುದ್ದೆಗಳು ಸಿಗುತ್ತದೆ. ಹೀಗಾಗಿ, ಒಳ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ಸಚಿವ ಸಂಪುಟದಲ್ಲೂ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ನಾಗರಾಜ ಮಾಳಗಿ, ಅಶೋಕ ಮರೆಣ್ಣನವರ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.