ರಟ್ಟೀಹಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಗುರುವಾರ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಯಿತು
ರಟ್ಟೀಹಳ್ಳಿ: ‘ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಪ್ರಾಮಾಣಿಕವಾಗಿ, ತ್ವರಿತವಾಗಿ ನಿರ್ವಹಿಸಬೇಕು. ಅನಗತ್ಯ ಅಲೆದಾಟವನ್ನು ತಪ್ಪಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ವಸಂತಕುಮಾರ ಸೂಚಿಸಿದರು.
ರಟ್ಟೀಹಳ್ಳಿ ಪಟ್ಟಣದಲ್ಲಿ ಬುಧವಾರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಜರುಗಿದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
‘ಅಕ್ಷರ ದಾಸೋಹ ಯೋಜನೆಯಡಿ ಕಾಲಕಾಲಕ್ಕೆ ಅಡುಗೆ ಸಿಬ್ಬಂದಿಗೆ ತರಬೇತಿ ನೀಡಬೇಕು. ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಅಕ್ಷರ ದಾಸೋಹ ನಿರ್ದೇಶಕರಿಗೆ ಸಲಹೆ ನೀಡಿದರು.
ತಾಲ್ಲೂಕಿನ ಪ್ರತಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಇಒ ಎನ್. ರವಿ ಮಾತನಾಡಿ, ‘ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಕಡಿವಾಣ ಹಾಕಬೇಕು’ ಎಂದು ಸೂಚಿಸಿದರು.
ಯುಟಿಪಿ ಎಂಜಿನಿಯರ್ ಎಸ್. ಯಶೋದಾ, ರವಿಕುಮಾರ, ಹೆಸ್ಕಾಂ ಎಂಜಿನಿಯರ್ ರಾಜೀವ ಮರಿಗೌಡ್ರ, ಪಶುಸಂಗೋಪನಾ ಇಲಾಖೆಯ ಮಂಜುನಾಥ ಮಾಯಾಚಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ., ಎಚ್.ಎಚ್. ಜಾಡರ, ಡಾ. ಲೋಕೇಶಕುಮಾರ, ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.