
ಶಿಗ್ಗಾವಿ: ಅಧಿಕಾರ, ಅಂತಸ್ತುಗಳು ಎಂದಿಗೂ ಶಾಶ್ವತವಲ್ಲ. ಜನ ನೀಡಿದ ಅಧಿಕಾರವನ್ನು ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸುತ್ತೇನೆ. ಸಿಕ್ಕಿರುವ ಅವಕಾಶದಲ್ಲಿ ಜನಕಲ್ಯಾಣ ಕಾರ್ಯಗಳಿಗೆ ಮೀಸಲಿಡುತ್ತಿದ್ದೇನೆ ಎಂದು ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಹೇಳಿದರು.
ತಾಲ್ಲೂಕಿನ ಹುಲಗೂರ ಗ್ರಾಮದಲ್ಲಿ ಶನಿವಾರ ನಡೆದ ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹುಲಗೂರ ಪಶು ಆಸ್ಪತ್ರೆ ನಿರ್ಮಾಣಕ್ಕೆ ₹48 ಲಕ್ಷ, ಸರ್ಕಾರಿ ಉರ್ದು ಪ್ರೌಢಶಾಲೆಯ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ₹11.52 ಲಕ್ಷ ಅನುದಾನ ನೀಡಲಾಗಿದೆ. ಅಲ್ಲದೆ ಗ್ರಾಮದ ರಸ್ತೆ, ಕುಡಿಯುವ ನೀರು ವಿವಿಧ ಕಾಮಗಾರಿಗಳಿಗೆ ಅನುದಾನ ನೀಡಲಾಗಿದೆ. ಅದರಿಂದ ತಾಲ್ಲೂಕಿನಲ್ಲಿ ದೊಡ್ಡ ಗ್ರಾಮವಾಗಿರುವ ಕಾರಣ ಇಲ್ಲಿನ ಬೇಡಿಕೆಗಳಿಗೆ ಸ್ಪಂದಿಸಿ ಅನುದಾನ ವಿತರಣೆ ಮಾಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಸಾಯಿ ಕುಟುಂಬದವರು ಭೂಮಿ ದಾನ ಮಾಡಿರುವುದಕ್ಕೆ ಅವರಿಗೆ ಸದಾ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಪ್ರತಿ ವರ್ಷ ₹5 ಲಕ್ಷ ಕೋಟಿ ತೆರೆಗೆ ಹಣ ಕಟ್ಟುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಹಿಂಜರಿಯುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ಅದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಗೋವಿನಜೋಳ ಬೆಳೆದ ರಾಜ್ಯದ ರೈತರನ್ನು ಕಡೆಗಣಿಸುತ್ತಿದೆ. ರೈತರು ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಹೈನುಗಾರಿಗೆ ಹೆಚ್ಚಿಸುವ ಉದ್ದೇಶದಿಂದ ಪಶು ಆಸ್ಪತ್ರೆಗೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರ ಹಾಲಿಗೆ 5ರ ಬದಲಾಗಿ ₹7 ಪ್ರೋತ್ಸಾಹಧನ ನೀಡುವ ಮೂಲಕ ರೈತರಿಗೆ ಶಕ್ತಿ ನೀಡುವ ಕೆಲಸ ಮಾಡಲಾಗುತ್ತಿದೆ. 6ನೇ ಗ್ಯಾರಂಟಿ ಯೋಜನೆಯಾಗಿ ಕ್ಷೇತ್ರದಲ್ಲಿ 20 ಸಾವಿರ ಬಡಜನರಿಗೆ ಪಟ್ಟಾ ನೀಡಲಾಗುತ್ತಿದೆ. ಅದನ್ನೂ ಸಹ ಕೆಲವು ಜನರು ವಿರೋಧಿಸುವುದನ್ನು ಕಾಣುತ್ತಿದ್ದೇವೆ. ಹೀಗಾದರೆ ಬಡಕೂಲಿಕಾರರು ಆರ್ಥಿಕವಾಗಿ ಬೆಳವಣಿಗೆ ಹೇಗೆ ಆಗಲು ಸಾಧ್ಯವಿದೆ. ಆದರೆ ಜನರ ಸೇವೆ ಮಾಡಿ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.
ಹುಲಗೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಾವೀದ್ ಸವಣೂರ, ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಎಸ್.ಎಫ.ಮಣಕಟ್ಟಿ, ಗುಡ್ಡಪ್ಪ ಜಲದಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಪಾಟೀಲ, ಮಲ್ಲಮ್ಮ ಸೋಮಕಟ್ಟಿ, ಅಣ್ಣಪ್ಪ ಲಮಾಣಿ, ರಿಯಾಜ್, ರುದ್ರಣ್ಣ, ಈಸುಬಸಾಬ ಭಾವಿಕಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.