ADVERTISEMENT

ಹಾವೇರಿ | ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ: 3,955 ವಿದ್ಯಾರ್ಥಿಗಳ ನೋಂದಣಿ

ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ನಕಲು ಮುಕ್ತವಾಗಿರಲಿ; ಎಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 14:23 IST
Last Updated 18 ಆಗಸ್ಟ್ 2023, 14:23 IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಮಾತನಾಡಿದರು
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಮಾತನಾಡಿದರು   

ಹಾವೇರಿ: ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಆ.21ರಿಂದ ಸೆ.2ರವರೆಗೆ ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ನಕಲು ಮುಕ್ತ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಬಂಡಲ್ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳ ಬಂಡಲ್‍ಗಳನ್ನು ಸೀಲ್ ಮಾಡುವಾಗ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಮಾಡಬೇಕು ಎಂದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ಪ್ರಶ್ನೆ ಪತ್ರಿಕೆ ಸಂಗ್ರಹಣೆ ಹಾಗೂ ರವಾನೆ ಬಹಳ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ, ಇ-ಕ್ಯಾಮೆರಾ, ಲ್ಯಾಪ್‌ಟಾಪ್‌ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿನ ಜೆರಾಕ್ಸ್‌ ಸೆಂಟರ್ ಹಾಗೂ ಟೈಪಿಂಗ್ ಸೆಂಟರ್ ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರು ಹಾಗೂ ಬಂದೋಬಸ್ತ್‌ಗೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ ಮಾತನಾಡಿ, ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಜಿಲ್ಲೆಯಲ್ಲಿ 3,955 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಸುವ್ಯವಸ್ಥಿತ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಡಿವೈಎಸ್‍ಪಿ ಪಾಟೀಲ, ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.