ಹಾವೇರಿ: ‘ಬಂಜಾರ ಗುರುಪೀಠದ ಕುಮಾರ ಮಹಾರಾಜರ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಗಿರೀಶ ಡಿ.ಆರ್ ಒತ್ತಾಯಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಸವಣೂರು ತಾಲ್ಲೂಕಿನ ಕೃಷ್ಣಾಪುರದ ಬಂಜಾರ ಗುರುಪೀಠದ ಬಳಿ ಮೇ 16ರಂದು ಟ್ರ್ಯಾಕ್ಟರ್ನಲ್ಲಿ ಉಳುಮೆ ಮಾಡುತ್ತಿದ್ದ ಯುವಕನಿಗೆ ಡಿಜೆ ಸೌಂಡ್ ಕಡಿಮೆಗೊಳಿಸು, ಪೂಜೆಗೆ ತೊಂದರೆ ಆಗುತ್ತದೆ ಎಂದು ಸ್ವಾಮೀಜಿ ತಿಳಿ ಹೇಳಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿದ್ದರು. ಈ ಹಿನ್ನೆಲೆ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇನ್ನೊಬ್ಬ ಪರಾರಿಯಾಗಿದ್ದಾನೆ. ಅವನನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಕುಮಾರ ಮಹಾರಾಜರಿಗೆ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ರಾಜಕೀಯ ಒತ್ತಡಕ್ಕೆ ಮಣಿಯದೇ ಹಲ್ಲೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. 15 ದಿನದೊಳಗೆ ಹಾವೇರಿಯಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ‘ಬೃಹತ್ ರ್ಯಾಲಿ’ ನಡೆಸಲಾಗುವುದು ಎಂದು ಹೇಳಿದರು.
ತರೀಕೆರೆಯ ಮಂಜು ಮಹಾರಾಜರು ಮಾತನಾಡಿ, ‘ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆಯಲಾಗುವುದು. ಬಂಜಾರ ಸಮುದಾಯದ ಮಠಕ್ಕೆ ಅನುದಾನ ನೀಡದೇ ಸಿಎಂ ಅವರು ಅನ್ಯಾಯ ಎಸಗಿದ್ದಾರೆ. ತಾಂಡಾ ಅಭಿವೃದ್ಧಿ ನಿಗಮಕ್ಕೆ ಕೇವಲ ₹25 ಕೋಟಿ ಕೊಟ್ಟಿರುವುದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕುಂಚನಳ್ಳಿ ಮಠದ ನಾಗರಾಜ ಸ್ವಾಮೀಜಿ, ಬಂಜಾರ ಸಮಾಜದ ಪ್ರಮುಖರಾದ ತಿಪ್ಪೇಸ್ವಾಮಿ, ಬಾಲು, ನಾಗರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.