ADVERTISEMENT

ಸಂಚಾರ ನಿಯಮ ಪಾಲಿಸಲು ಪುಟ್ಟರಾಜು ಸಲಹೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 15:21 IST
Last Updated 10 ನವೆಂಬರ್ 2021, 15:21 IST
ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಮಂಗಳವಾರ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ನ್ಯಾಯಾಧೀಶ ಪುಟ್ಟರಾಜು, ಆರ್‌ಟಿಒ ವಸೀಮಬಾಬಾ ಮುದ್ದೇಬಿಹಾಳ ಇದ್ದಾರೆ 
ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಮಂಗಳವಾರ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ನ್ಯಾಯಾಧೀಶ ಪುಟ್ಟರಾಜು, ಆರ್‌ಟಿಒ ವಸೀಮಬಾಬಾ ಮುದ್ದೇಬಿಹಾಳ ಇದ್ದಾರೆ    

ಹಾವೇರಿ: ವಾಹನಗಳ ಚಾಲನೆ ಸಮಯದಲ್ಲಿ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಮಂಗಳವಾರ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ 2021ರ ಪ್ರಯುಕ್ತ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ ಹಾಗೂ ವಾಹನ ಚಾಲನಾ ಅನುಜ್ಞಾಪತ್ರಗಳ ವಿತರಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾನೂನಿನ ಅರಿವು ಹಾಗೂ ನೆರವಿನ ಅಗತ್ಯವಿದ್ದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಮಾತನಾಡಿ, ವಾಯುಮಾಲಿನ್ಯದಿಂದ ವಾತಾವರಣದಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಆರೋಗ್ಯ ಸಮಸ್ಯೆ ಎದುರಿಸಬೇಕಾಗಿದೆ. ಪ್ರತಿಯೊಬ್ಬರು ಗಿಡಮರಗಳನ್ನು ಹೆಚ್ಚಾಗಿ ಬೆಳೆಸುವುದರ ಮೂಲಕ ವಾಯುಮಾಲಿನ್ಯ ತಡೆಗಟ್ಟಬಹುದಾಗಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಯಿಂದ ಇಂಧನ ಖರ್ಚಿನ ಉಳಿತಾಯವಾಗುತ್ತದೆ ಹಾಗೂ ಪರಿಸರದ ಸಂರಕ್ಷಣೆ ಆಗುತ್ತದೆ. ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದರು.

ADVERTISEMENT

ರಾಣೇಬೆನ್ನೂರಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಾಸ್ತಾಮಿಕವಾಗಿ ಮಾತನಾಡಿ, ಸಾರ್ವಜನಿಕರು ತಮ್ಮ ವಾಹನಗಳನ್ನು ಸುಸ್ಥಿಯಲ್ಲಿಟ್ಟುಕೊಳ್ಳಬೇಕು ಹಾಗೂ ಕಾಲಕಾಲಕ್ಕೆ ವಾಹನಗಳ ವಾಯುಮಾಲಿನ್ಯವನ್ನು ತಪಾಸಣೆ ಕೇಂದ್ರಗಳಲ್ಲಿ ಪರೀಕ್ಷಿಸಿಕೊಂಡು ಪ್ರಮಾಣ ಪತ್ರಗಳನ್ನು ನಿಯಮಿತವಾಗಿ ಪಡೆದುಕೊಳ್ಳಬೇಕು ಎಂದರು.

ಸಾರ್ವಜನಿಕರಿಗೆ ಚಾಲನಾ ಅನುಜ್ಞಾ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಮೋಟಾರು ವಾಹನ ನಿರೀಕ್ಷಕ ಪ್ರಭುಸ್ವಾಮಿ ಹಿರೇಮಠ, ಮೋಟಾರು ವಾಹನ ಚಾಲನಾ ತರಬೇತಿ ಶಾಲೆಗಳ ಮುಖ್ಯಸ್ಥರು, ಶ್ರೀಪಾದ ಬ್ಯಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.