
ರಾಣೆಬೆನ್ನೂರು: ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟ ಎಲ್ಲ ಭರವಸೆಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಇಲ್ಲಿನ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಾಣೆಬೆನ್ನೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ನ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ಕೊಟ್ಟಿರುವ ಯೋಜನೆಗಳನ್ನು ಜನತೆಗೆ ಮುಟ್ಟಿಸಲು ಪ್ರಯತ್ನಿಸಬೇಕು ಎಂದರು.
ಕಾಂಗ್ರೆಸ್ನ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಟ್ಟ ಗ್ಯಾರಂಟಿ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಿದೆ. ಎಲ್ಲರೂ ಪಕ್ಷದ ಒಳಿತಿಗಾಗಿ ದುಡಿಯಬೇಕು ಎಂದು ತಿಳಿಸಿದರು.
ನಗರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಪುಟ್ಟಪ್ಪ ಮರಿಯಮ್ಮನವರ ಅವರಿಗೆ ನಿಕಟ ಪೂರ್ವ ಅಧ್ಯಕ್ಷ ಶೇರ್ ಖಾನ್ ಕಾಬೂಲಿ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ ಬೇಡರ ಅವರಿಗೆ ನಿಕಟ ಪೂರ್ವ ಅಧ್ಯಕ್ಷ ಮಂಜನಗೌಡ ಪಾಟೀಲ ಅವರು ಅಧಿಕಾರ ಹಸ್ತಾಂತರಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ನೀರಲಗಿ ಅವರು ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಶುಭ ಕೋರಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಮಂಜುನಾಥ ನಲವಾಗಲ ಅವರನ್ನು ಹಾಗೂ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳನ್ನು ಪಕ್ಷದಿಂದ ಸನ್ಮಾನಿಸಲಾಯಿತು.
ವಿಧಾನ ಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಮತ್ತು ಮಾಜಿ ಸಚಿವ ಆರ್.ಶಂಕರ ಮಾತನಾಡಿದರು.
ನಗರ ಘಟಕದ ನೂತನ ಅಧ್ಯಕ್ಷ ಪುಟ್ಟಪ್ಪ ಮರಿಯಮ್ಮನವರ ಮಾತನಾಡಿ, ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ನ ಎಲ್ಲರನ್ನು ಪ್ರೀತಿ– ವಿಶ್ವಾಸದಿಂದ ಗ್ರಾಮೀಣ ಪ್ರದೇಶದ ಬೂತ್ ಮಟ್ಟದಲ್ಲಿ ಬಲಿಷ್ಠ ತಂಡ ಕಟ್ಟುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿರೇಶ ಮೋಟಗಿ, ಎ.ಎಂ.ನಾಯಕ, ಮರದ ಬಸನಗೌಡ, ಇರ್ಫಾನ್ ದಿಡಗೂರ, ಆರ್.ಎಂ.ಕುಬೇರಪ್ಪ, ಕೃಷ್ಣಪ್ಪ ಕಂಬಳಿ, ದರ್ಶನ ಲಮಾಣಿ, ಬೀರಪ್ಪ ಲಮಾಣಿ, ಪ್ರೊ. ಬಿ.ಬಿ.ನಂದ್ಯಾಲ, ಸನಾಉಲ್ಲಾ ಕುಂದೂರ, ಜಪ್ರುಲ್ಲಾ ಕಂಚರಗಡ್ಡಿ, ಬಾಷಾಸಾಬ ಕಾಟೇನಹಳ್ಳಿ, ಜಮ್ಮಣ್ಣಿ ಅತ್ತಾರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.