ಹಾವೇರಿ: ಕೇಂದ್ರ ಸರ್ಕಾರದ ಮಾರ್ಗಸೂಚಿ ಬೆಂಬಲ ಬೆಲೆ ನೀಡಬೇಕು ಹಾಗೂ ಶಾಶ್ವತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಆಗ್ರಹಿಸಿ ಜಿಲ್ಲಾ ರೈತ ಸೇನಾ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ರೈತ ಸೇನಾ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಲಿಂಗೇಶ (ವರುಣಗೌಡ) ಪಾಟೀಲ ನೇತೃತ್ವ ವಹಿಸಿ ಮಾತನಾಡಿ, ‘ಮುಂಗಾರು ,ಹಿಂಗಾರು ಬೆಳೆಗಳಾದ ಗೋವಿನಜೋಳ, ಹತ್ತಿ, ಭತ್ತ, ಶೇಂಗಾ, ಕಡಲೆ, ತೊಗರಿ ಸೇರಿದಂತೆ ಹಲವು ಬೆಳೆಗಳು ಅತಿಯಾದ ಮಳೆಯಿಂದ ಇಳುವರಿ ಕಡಿಮೆಯಾಗಲಿವೆ. ಹೀಗಾಗಿ ಸರ್ಕಾರಗಳು ಇಂತಹ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸ್ಥಾಪಿಸುವುದು ಅಗತ್ಯವಾಗಿದೆ ಎಂದರು.
ರೈತರು ಬೆಳೆದ ಎಲ್ಲ ಬೆಳಗಳನ್ನು ಕಡ್ಡಾಯವಾಗಿ ಖರೀದಿಸಬೇಕು. ಅದರಲ್ಲಿ ಯಾವುದೇ ಷರತ್ತುಗಳನ್ನು ವಿಧಿಸಬಾರದು. ಖರೀದಿ ಕೇಂದ್ರಗಳನ್ನು ಇನ್ನು 15 ದಿನಗಳಲ್ಲಿ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಶಾಂತ ದುಂಡಿಗೌಡ್ರ, ಮುಖಂಡರಾದ ನೀಲಪ್ಪ ಮಾಕಪ್ಪನವರ, ಪ್ರಶಾಂತ ಕ್ಷತ್ರಿಯ, ಮರ್ಧಾನಲಿ ನಧಾಪ, ನಾಗನಗೌಡ ಪಾಟೀಲ, ಬಸವರಾಜ ನೀರಲಗಿಮಠ, ಪಂಚಾಕ್ಷರಿ ಷಣ್ಮುಕಮಠ, ಇಮಾಮಸಾಬ ನಧಾಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.