ADVERTISEMENT

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 11:50 IST
Last Updated 5 ನವೆಂಬರ್ 2020, 11:50 IST
ಹಾವೇರಿ ಜಿಲ್ಲಾಡಳಿತ ಭವನದ ಮುಂಭಾಗ ಗುರುವಾರ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು 
ಹಾವೇರಿ ಜಿಲ್ಲಾಡಳಿತ ಭವನದ ಮುಂಭಾಗ ಗುರುವಾರ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು    

ಹಾವೇರಿ: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯದೆ ಸರ್ಕಾರ ಕಾಲಹರಣ ಮಾಡುತ್ತಿದೆ. 15 ದಿನದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೆಕ್ಕೆಜೋಳ ಸುರಿದು ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತ ಭವನದ ಮುಂಭಾಗ ಗುರುವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿಸುತ್ತೇವೆ ಎಂಬ ಸರ್ಕಾರದ ಭರವಸೆ ಈಡೇರಲಿಲ್ಲ. ಹೀಗಾಗಿ ಎಪಿಎಂಸಿ ಮೂಲಕ ಖರೀದಿ ಕೇಂದ್ರ ತೆರೆದು ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು. ದೇಶದ ಬೆನ್ನೆಲುಬು ಅಂತ ಹೇಳಿಕೆಯಲ್ಲಿ ಕಾಲ ಕಳೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬದುಕನ್ನು ನಾಶ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಹುಚ್ಚಣ್ಣ ಮಾತನಾಡಿ, ರೈತರಿಗೆ ಸಂಬಂಧಪಟ್ಟ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿರುವುದನ್ನು ವಾಪಸ್‌ ಪಡೆಯಬೇಕು. ಕೃಷಿ ಉತ್ಪನ್ನಗಳನ್ನು ಎಂ.ಎಸ್‌.ಪಿ. ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮತ್ತು ಖರೀದಿ ಮಾಡುವುದು ಅಪರಾಧ ಎಂಬ ಪಂಜಾಬ್‌ ಸರ್ಕಾರದ ಮಾದರಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕೇರಳ ಸರ್ಕಾರ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಿರುವಂತೆ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳಬೇಕು. ಶೇಂಗಾ, ಮೆಕ್ಕೆಜೋಳ, ಹತ್ತಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಅತಿವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿರುವ ರೈತರಿಗೆ ನ್ಯಾಯಯುತ ಪರಿಹಾರ ಕೊಡಬೇಕು. ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ರೈತ ಮುಖಂಡರಾದ ನೂರ್‌ ಅಹಮದ್‌ ಮುಲ್ಲಾ, ಬಸವರಾಜ ದು.ತಳವಾರ, ಹಾಲೇಶ ಕೆರುಡಿ, ಪ್ರಭಣ್ನ ರಾಗೇರ, ಜಗದೀಶ ಬಳ್ಳಾರಿ, ರಾಜು ತರ್ಲಘಟ್ಟ, ಮಂಜಣ್ಣ ಅರಳಿ, ಈರಣ್ಣ ಮುದಿಯಪ್ಪನವರ, ಮಾದೇವಪ್ಪ ಮಾಳಮ್ಮನವರ, ಎಂ.ಎನ್‌.ನಾಯಕ, ರುದ್ರಪ್ಪ ಬಳಿಗಾರ, ಚನ್ನಪ್ಪ ಮರಡೂರ, ಮುತ್ತು ಗುಡಿಗೇರ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.