ADVERTISEMENT

ಮೃತರ ಸಂಸ್ಕಾರಕ್ಕೆ ಪ್ರತ್ಯೇಕ ಸ್ಥಳ ಕಾಯ್ದಿರಿಸಿ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 14:35 IST
Last Updated 20 ಜುಲೈ 2020, 14:35 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೃಷ್ಣ ಬಾಜಪೇಯಿ ಅವರು ತಹಶೀಲ್ದಾರ್‌ಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು 
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೃಷ್ಣ ಬಾಜಪೇಯಿ ಅವರು ತಹಶೀಲ್ದಾರ್‌ಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು    

ಹಾವೇರಿ: ಕೋವಿಡ್ ವೈರಾಣುವಿನಿಂದ ಮೃತರಾದವರನ್ನು ಗೌರವಯುತವಾಗಿ ಸಂಸ್ಕಾರ ನೆರವೇರಿಸಲು ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನ ಊರಿನ ಹೊರವಲಯದಲ್ಲಿ ಪ್ರತ್ಯೇಕ ಸ್ಥಳ ಗುರುತಿಸುವಂತೆ ತಾಲ್ಲೂಕು ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದರು.

ತಾಲ್ಲೂಕು ತಹಶೀಲ್ದಾರ್‌ಗಳೊಂದಿಗೆ ಸೋಮವಾರ ‘ವಿಡಿಯೊ ಸಂವಾದ’ ನಡೆಸಿದ ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆ ಸೌಲಭ್ಯಗಳು, ಕೋವಿಡ್ ಕೇರ್ ಸೆಂಟರ್ ಹಾಗೂ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ ಹಾಗೂ ಕಂಟೈನಮೆಂಟ್ ಜೋನ್‍ಗಳ ನಿರ್ವಹಣೆ ಕುರಿತಂತೆ ಮಾಹಿತಿ ಪಡೆದರು.

ಪ್ರತ್ಯೇಕ ಸ್ಥಳ

ADVERTISEMENT

ಕೋವಿಡ್ ಕಾರಣದಿಂದ ಮೃತರಾದವರನ್ನು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಂಸ್ಕಾರಕ್ಕೆ ನಿರಾಕರಿಸಿದರೆ ತಾಲ್ಲೂಕುಆಡಳಿತದಿಂದಲೇ ಗೌರವಯುತವಾಗಿ ಸಂಸ್ಕಾರ ಮಾಡಬೇಕು. ಈ ಹಿನ್ನೆಲೆಯಲ್ಲಿ ಈಗಾಗಲೇ ಹಾವೇರಿ ಮತ್ತು ರಾಣೆಬೆನ್ನೂರಿನಲ್ಲಿ ಸಂಸ್ಕಾರಕ್ಕಾಗಿ ಪ್ರತ್ಯೇಕ ಸ್ಥಳವನ್ನು ಗುರುತಿಸಲಾಗಿದೆ. ಇದೇ ಮಾದರಿಯಲ್ಲಿ ಉಳಿದ ತಾಲ್ಲೂಕುಗಳಲ್ಲಿ ಅರ್ಧ ಎಕರೆಯಿಂದ ಒಂದು ಎಕರೆಯಷ್ಟು ಸರ್ಕಾರಿ ಜಾಗವನ್ನು ಊರಿನಿಂದ ಹೊರಗೆ ಗುರುತಿಸಬೇಕು. ಯಾವುದೇ ವಿವಾದಾತ್ಮಕ ಸ್ಥಳವಾಗಿರಬಾರದು ಎಂದು ಸಲಹೆ ನೀಡಿದರು.

ಆಂಬುಲೆನ್ಸ್ ಸೌಲಭ್ಯ

ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿತರ ತುರ್ತು ದಾಖಲಾತಿಗಾಗಿ ಪ್ರತ್ಯೇಕವಾಗಿ ವೆಂಟಿಲೇಟರ್ ಸೌಲಭ್ಯಯುಳ್ಳ ಆಂಬುಲೆನ್ಸ್‌ ಅನ್ನು 24 ತಾಸು ಸೇವೆಗೆ ಲಭ್ಯವಿರುವಂತೆ ಕಾಯ್ದಿರಿಸಬೇಕು. ಅಗತ್ಯಬಿದ್ದಲ್ಲಿ ಬಾಡಿಗೆ ಆಧಾರದಲ್ಲಿ ಸೇವೆ ಪಡೆಯಲು ಸೂಚನೆ ನೀಡಿದರು.

ಕ್ವಾರಂಟೈನ್ ಸೆಂಟರ್, ಕೋವಿಡ್ ಕೇರ್ ಸೆಂಟರ್ ಹಾಗೂ ಡೆಡಿಕೇಟೆಡ್ ಕೋವಿಡ್ ಆಸ್ಪತ್ರೆಗಳಲ್ಲಿ ಬಿಸಿನೀರಿನ ವ್ಯವಸ್ಥೆ ಕಲ್ಪಿಸಬೇಕು. ಊಟದ ಬಗ್ಗೆ ಯಾವುದೇ ದೂರುಗಳು ಬರಬಾರದು. ಈ ಕೇಂದ್ರಗಳ ಸಾಮಾನ್ಯ ತ್ಯಾಜ್ಯಗಳ ವಿಲೇವಾರಿಗೆ ಪ್ರತ್ಯೇಕ ಸಿಬ್ಬಂದಿ ನಿಯೋಜಿಸಬೇಕು. ಸೋಂಕಿತರ ಚಿಕಿತ್ಸೆ ನೀಡುವಲ್ಲಿ ಪ್ರತಿ ದಿನದ ತಪಾಸಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಲು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶ, ತಹಶೀಲ್ದಾರ್‌ ಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.