ಸವಣೂರು: ಪಟ್ಟಣದ ತಾಲ್ಲೂಕು ಪಶು ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ರೈತ ಸಂಘಟನೆ ಪದಾಧಿಕಾರಿಗಳ ನೇತೃತ್ವದಲ್ಲಿ ರೈತರು ಇತ್ತೀಚೆಗೆ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ಕೈಗೊಂಡರು.
ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಸಿಬ್ಬಂದಿ ಔಷಧಿಗಳನ್ನು ಹೊರಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ. ಒಟ್ಟಾರೆ ಆಸ್ಪತ್ರೆಯಲ್ಲಿ ಯಾವುದೇ ಸೌಲಭ್ಯ ನೀಡಲು ವೈದ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ರೈತರ ಸಮಸ್ಯಗೆ ಪರಿಹಾರ ನೀಡಲು ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರವಿಕುಮಾರ ಕೊರವರ ರೈತರೊಂದಿಗೆ ಮಾತನಾಡಿ, ಸಮಸ್ಯೆ ಆಲಿಸಿದರು. ನಂತರ, ಪಶು ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೆ ಎಚ್ಚರಿಕೆ ನೀಡಿ, ರೈತರ ಜಾನುವಾರುಗಳಿಗೆ ಪಶು ವೈದ್ಯರೇ ಪರಿಶೀಲಿಸಿ ಚಿಕಿತ್ಸೆ ನೀಡಬೇಕು. ರೈತರು ಸಂಕಷ್ಟವನ್ನು ಹೇಳಿಕೊಳ್ಳುವ ಮೊದಲು ಸರ್ಕಾರದ ಸೌಲಭ್ಯಗಳ ಅಡಿಯಲ್ಲಿ ಸೇವೆಯನ್ನು ನೀಡಲು ಸೂಚಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಪದಾಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.