
ಬ್ಯಾಡಗಿ: ತಾಲ್ಲೂಕಿನ ಮಲ್ಲೂರು ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ದಾನ ನೀಡಿದ್ದ ಭೂಮಿಗಿಂತಲೂ ಹೆಚ್ಚು ಒತ್ತುವರಿ ಮಾಡಿರುವ ಭೂಮಿಯನ್ನು ವಾಪಸ್ ಕೊಡುವಂತೆ ಆಗ್ರಹಿಸಿ ಭೂಮಾಲೀಕರೊಬ್ಬರು ಸೋಮವಾರ ಶಾಲೆಗೆ ಬೀಗ ಹಾಕಿದ ಘಟನೆ ನಡೆಯಿತು.
ಇದರಿಂದ ಆತಂಕಗೊಂಡ ಸಿಬ್ಬಂದಿ ಹಾಗೂ ಮಕ್ಕಳು ಎರಡು ಗಂಟೆಗೂ ಹೆಚ್ಚು ಹೊತ್ತು ಬಿಸಿಲಿನಲ್ಲಿಯೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ‘ದಾನಕ್ಕಿಂತ ಹೆಚ್ಚಿನ ಭೂಕಬಳಿಕೆ ನಡೆದು ನನಗೆ ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ’ ಎಂದು ಭೂಮಾಲೀಕ ವೀರಪ್ಪ ಕುಲಕರ್ಣಿ ಆರೋಪಿಸಿದರು.
2005ರಲ್ಲಿ ಶಂಕ್ರಪ್ಪ ಕುಲಕರ್ಣಿ ಸರ್ಕಾರಿ ಉರ್ದು ಶಾಲೆಗೆ 5 ಗುಂಟೆ ಜಾಗೆಯನ್ನು ದಾನವಾಗಿ ನೀಡಿದ್ದರು. ಆದರೆ 15 ಗುಂಟೆ ಜಾಗೆಯನ್ನು ಅತಿಕ್ರಮಣ ಮಾಡಿ ಅನ್ಯಾಯ ಮಾಡಿದ್ದಾರೆ ಎಂದು ದಾನಿ ಶಂಕ್ರಪ್ಪ ಅವರ ಪುತ್ರರು ಆರೋಪಿಸಿದ್ದಾರೆ.
ಪ್ರಕರಣ ನ್ಯಾಯಾಲಯದಲ್ಲಿ: ಹೆಚ್ಚು ಜಾಗೆಯನ್ನು ಒತ್ತುವರಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತಹಶೀಲ್ದಾರ ಚಂದ್ರಶೇಖರ ನಾಯಕ ಮತ್ತು ಬಿಇಒ ಎಸ್.ಜಿ.ಕೋಟಿ ಸ್ಥಳಕ್ಕೆ ಆಗಮಿಸಿ ಬೀಗ ತೆಗೆಯುವಂತೆ ಮನವಿ ಮಾಡಿದ್ದಾರೆ. ಗ್ರಾಮಸ್ಥರ ಹಾಗೂ ಪೊಲೀಸರ ಮಧ್ಯಸ್ಥಿಕೆಯಲ್ಲಿ ಸಂಧಾನ ನಡೆಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.