ADVERTISEMENT

ರಾಣೆಬೆನ್ನೂರು | ಶಾಲಾ ಪ್ರಾರಂಭೋತ್ಸವ: 21 ಸಾವಿರ ಹೋಳಿಗೆ ವಿತರಣೆ

​ಪ್ರಜಾವಾಣಿ ವಾರ್ತೆ
Published 31 ಮೇ 2023, 15:33 IST
Last Updated 31 ಮೇ 2023, 15:33 IST
ರಾಣೆಬೆನ್ನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 7ರಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಪ್ರಕಾಶ ಕೋಳಿವಾಡ ವಿದ್ಯಾರ್ಥಿಗಳಿಗೆ ಹೋಳಿಗೆ ವಿತರಣೆ ಮಾಡಿದರು
ರಾಣೆಬೆನ್ನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 7ರಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಪ್ರಕಾಶ ಕೋಳಿವಾಡ ವಿದ್ಯಾರ್ಥಿಗಳಿಗೆ ಹೋಳಿಗೆ ವಿತರಣೆ ಮಾಡಿದರು   

ರಾಣೆಬೆನ್ನೂರು: ‘ಶಿಕ್ಷಕರಿಗೆ ಉತ್ತಮ ತರಬೇತಿ ನೀಡುವ ಮೂಲಕ ನಮ್ಮ ಕ್ಷೇತ್ರವನ್ನು ಶೈಕ್ಷಣಿಕವಾಗಿ ಪ್ರಗತಿ ಮಾಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲು ಆಸಕ್ತಿ ಹೊಂದಿದ್ದೇನೆ. ಶಿಕ್ಷಕರು ಮತ್ತು ಅಧಿಕಾರಿಗಳ ಸಹಕಾರ ಮುಖ್ಯ’ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಇಲ್ಲಿನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 7ರಲ್ಲಿ ಬುಧವಾರ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮತ್ತು ಹೋಳಿಗೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣವನ್ನು ನೀಡುವ ಗುರುತರವಾದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರಿಗೆ ನೂತನ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿಗೆ ತರಬೇತಿ ಕೊಡಿಸಲಾಗುವುದು’ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ ಅವರು ಮಾತನಾಡಿ, ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ತಾಲ್ಲೂಕಿನ ಎಲ್ಲ ಶಾಲೆಗಳನ್ನು ತಳಿರುತೋರಣ ಕಟ್ಟಿ ಶೃಂಗರಿಸಿ ಹಬ್ಬದ ವಾತಾವರಣ ಒದಗಿಸಲಾಗಿದೆ. ಜಿಲ್ಲೆಯಲ್ಲಿಯೇ ವಿಶೇಷವಾಗಿ ರಾಣೆಬೆನ್ನೂರು ತಾಲ್ಲೂಕಿನಲ್ಲಿ ಎಲ್ಲ ಶಾಲೆಗಳಲ್ಲಿ ಒಟ್ಟು 21,276 ಹೋಳಿಗೆ, ಮುಳಗಾಯಿ ಪಲ್ಯ, ರುಚಿಕರವಾದ ಅನ್ನ ಸಾಂಬಾರ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದ್ದು, ತಾವು ಅದೇ  ಊಟ ಸವಿದಿದ್ದಾಗಿ ತಿಳಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಂಜು ನಾಯ್ಕ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಲಿಂಗರಾಜ ಸುತ್ತಕೋಟಿ, ಬಸವರಾಜ ಕಂಬಳಿ, ಮುಖ್ಯ ಶಿಕ್ಷಕಿ ನಿರ್ಮಲಾ ಮಾನೆ, ಗವೇನವರ, ಎಸ್‌ಡಿಎಂಸಿ ಪದಾಧಿಕಾರಿಗಳು, ಶಾಲಾ ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.