ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸದಾ ನೆನಪಿನಲ್ಲಿ ಉಳಿಯಬೇಕು. ಹಾವೇರಿ ಸಮ್ಮೇಳನ ಐತಿಹಾಸಿಕವಾಗಿಸುವ ನಿಟ್ಟಿನಲ್ಲಿ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಸಾಂಸ್ಕೃತಿಕ ತಂಡಗಳ ಆಯ್ಕೆಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ಥಳೀಯ ಸಾಂಸ್ಕೃತಿಕ ಅನನ್ಯತೆ ಜೊತೆಗೆ ನಾಡಿನ ಜಾನಪದ ಸಂಸ್ಕೃತಿ, ನಮ್ಮ ಪರಂಪರೆಯನ್ನು ಬಿಂಬಿಸುವ ಜೊತೆ ನೃತ್ಯ, ಸಂಗೀತ, ರೂಪಕ, ನಾಟಕ ಸೇರಿದಂತೆ ಹಲವು ಪ್ರಕಾರಗಳ ತಂಡಗಳನ್ನು ಆಯ್ಕೆ ಮಾಡಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಎರಡು ಸಮಾನಾಂತರ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಅವಕಾಶವಿದೆ. ವಿಚಾರ ವಿಮರ್ಶೆ, ಸಾಹಿತ್ಯಿಕ ಚರ್ಚೆ ನಂತರದ ಅವಧಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು. ಕನ್ನಡ ನಾಡು– ನುಡಿ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ಇರುತ್ತದೆ. ಸ್ಥಳೀಯ ಕಲಾ ತಂಡಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದರೊಂದಿಗೆ ರಾಜ್ಯದ, ಅಂತರರಾಷ್ಟ್ರೀಯ ಮಟ್ಟದ ಕಲಾತಂಡಗಳಿಗೆ ಸಮಯದ ಆಧಾರದ ಮೇಲೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಂಸ್ಕೃತಿಕ ತಂಡಗಳ ಸ್ವರೂಪ, ಪ್ರದರ್ಶನ ಅವಕಾಶಗಳು, ಆಯ್ಕೆ ಸಮಿತಿ ಜವಾಬ್ದಾರಿ ಕುರಿತು ವಿವರಿಸಿದರು.
ರಾಜ್ಯದ ಮೂವತ್ತು ಜಿಲ್ಲೆಗಳ ಕಲಾ ತಂಡಗಳಿಗೂ ಅವಕಾಶ ಕಲ್ಪಿಸಲಾಗುವುದು. ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯಿಂದ ಆಯ್ಕೆ ನಡೆಯಲಿದೆ. ಜಿಲ್ಲಾ ಮಟ್ಟದ ತಂಡಗಳನ್ನು ಜಿಲ್ಲಾ ಸಾಂಸ್ಕೃತಿಕ ಸಮಿತಿ ಆಯ್ಕೆ ಮಾಡಲಿದೆ. ಆಯ್ಕೆ ತಂಡಗಳನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ವಿವರಿಸಿದರು.
ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಹಿರಿಯ ಹಾಗೂ ಕಿರಿಯ ಕಲಾವಿದರು ಸಾಂಸ್ಕೃತಿಕ ತಂಡಗಳ ಆಯ್ಕೆ ಹಾಗೂ ಕಲಾ ಪ್ರಕಾರಗಳ ಕುರಿತ ಅಭಿಪ್ರಾಯ ಹಂಚಿಕೊಂಡರು.
ಸಭೆಗೆ ಸಾಂಸ್ಕೃತಿಕ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.