ಹಾವೇರಿ: ಕಾಡುಗೊಲ್ಲ ಅಭಿವೃದ್ಧಿ ನಿಗಮ ರದ್ದುಪಡಿಸಿ ‘ಅಖಂಡ ಕರ್ನಾಟಕ ಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು ಎಂದು ಜಿಲ್ಲಾ ಯಾದವ ಸಂಘ ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ತೆರಳಿ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಹೆಚ್ಚಿನ ಜನಸಂಖ್ಯೆಯಲಿರುವ ಗೊಲ್ಲ ಜನಾಂಗದವರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಅಗತ್ಯ. ಆದರೆ, ಶಿರಾ ಕ್ಷೇತ್ರದ ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಡುಗೊಲ್ಲ ಅಭಿವೃದ್ಧಿ ನಿಗಮ ರಚಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ನಾಡಿನ ಗೊಲ್ಲ ಸಮುದಾಯದ ಎಲ್ಲ ಉಪಪಂಗಡದವರಿಗೆ ಸರ್ಕಾರದ ಸೌಲಭ್ಯ ಸಿಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದಲ್ಲಿ ‘ಕಾಡು’ ಎಂಬ ಪದವನ್ನು ತೆಗೆದುಹಾಕಿ ಕರ್ನಾಟಕ ರಾಜ್ಯ ಗೊಲ್ಲ ಅಭಿವೃದ್ಧಿ ನಿಗಮವನ್ನಾಗಿ ಮುಂದುವರಿಸಬೇಕು. ಈ ಕುರಿತು ಸರ್ಕಾರ ತನ್ನ ತೀರ್ಮಾನದ ಬಗ್ಗೆ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಸಿ.ಎಂ.ತಂಗೋಡರ, ಕಾರ್ಯದರ್ಶಿ ಪಿ.ಆರ್. ಗೌಡರ, ಗೌರವಾಧ್ಯಕ್ಷ ಬಿ.ಡಿ. ಸಿದ್ಧಪ್ಪಳವರ, ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಪಾಟೀಲ, ಹನುಮಂತಗೌಡ ಗೊಲ್ಲರ, ಜಿಲ್ಲಾ ಸಂಘದ ಶಿವಪ್ಪ ಗೊಲ್ಲರ, ರಮೇಶ ಗುಂಗರಗೊಪ್ಪ, ಎಚ್.ಎಚ್. ಅಳಲಗೇರಿ, ಆರ್.ಎನ್. ಗೊಲ್ಲರ, ಬಸವರಾಜ ಮತ್ತೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.