
ಶಿಗ್ಗಾವಿ: ತಾಲ್ಲೂಕಿನ ಕನಕದಾಸರ ಬಾಡ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸಮಾಜ ವಿಜ್ಞಾನ ವಿಷಯದ ಶಿಕ್ಷಕ ಹೇಮರಾಜ್ ಎಚ್.ಪಿ ಅವರನ್ನು ತಾತ್ಕಾಲಿಕವಾಗಿ ಬೇರೆಡೆ ನಿಯೋಜಿಸಿರುವುದನ್ನು ಖಂಡಿಸಿ ಪಾಲಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಸೋಮವಾರ ಶಾಲಾ ಆವರಣದ ಮುಂದೆ ಪ್ರತಿಭಟನೆ ನಡೆಸಿದರು.
ಈ ಶಾಲೆಯಲ್ಲಿ 6ರಿಂದ 10ನೇ ತರಗತಿವರೆಗೆ ಸುಮಾರು 545 ವಿದ್ಯಾರ್ಥಿಗಳಿದ್ದಾರೆ. ಅದರಲ್ಲಿ 71 ವಿದ್ಯಾರ್ಥಿಗಳು ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಹತ್ತಿರವಿದ್ದು ಪ್ರಮುಖ ವಿಷಯದ ಬೋಧಕ ಶಿಕ್ಷಕರನ್ನು ರಾಜ್ಯ ಸರ್ಕಾರದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿದೇರ್ಶಕರು ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಅತಂತ್ರವಾಗುವ ಸ್ಥಿತಿಯಲ್ಲಿದ್ದಾರೆ.
ಪ್ರಬಲ ನಾಯಕರ ಒತ್ತಡಕ್ಕೆ ಮಣಿದು ಶಿಕ್ಷಕರ ನಿಯೋಜನೆ ಮಾಡುವುದು ಸರಿಯಲ್ಲ. ವಿದ್ಯಾರ್ಥಿಗಳ ವಾಸಂಗಕ್ಕೆ ಅಡ್ಡಿಪಡಿಸಬಾರದು. ಅನುಭವಿ ಶಿಕ್ಷಕರನ್ನು ಬೇರೆಡೆ ನಿಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ತಕ್ಷಣ ಅವರ ನಿಯೋಜನೆ ಮಾಡಬಾರದು ಎಂದು ವಿದ್ಯಾರ್ಥಿಗಳ ಪಾಲಕರು, ಪೋಷಕರು ಆಗ್ರಹಿಸಿದರು.
ಈ ಶಾಲೆಗೆ ಅತಿಥಿ ಶಿಕ್ಷಕ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಪೂರ್ಣಾವಧಿಗೆ ನೇಮಕವಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಶಿಕ್ಷಕನನ್ನು ಬೇರೆಡೆ ನಿಯೋಜನೆ ಮಾಡುವುದು ಸರಿಯಲ್ಲ. ಇದು ಸರ್ಕಾರದ ನಿಯಮಾವಳಿಗೆ ವಿರುದ್ದವಾಗಿದೆ. ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲು ಗ್ರಾಮಸ್ಥರು ಬಿಡುವುದಿಲ್ಲ ಎಂದು ಪಾಲಕ ಶಿವಾನಂದ ತೊಂಡೂರ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಗ್ರಾಮಸ್ಥರ ಮನವಿ ಪರಿಗಣಿಸಿ ಶಿಕ್ಷಕನ ನಿಯೋಜನೆಯನ್ನು ತಡೆದು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಲಾಗಿದೆಪ್ರಶಾಂತ, ಜಂಟಿ ನಿರ್ದೇಶಕ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.