ADVERTISEMENT

ಶಿಗ್ಗಾವಿ: ಮಾದರಿ ನಗರಕ್ಕೆ ಸಿಎಂ ಸಂಕಲ್ಪ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 16:30 IST
Last Updated 1 ಸೆಪ್ಟೆಂಬರ್ 2021, 16:30 IST
ಶಿಗ್ಗಾವಿ ಪಟ್ಟಣದ ಪುರಸಭೆ ವೃತ್ತದಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪ ಅರ್ಪಿಸಿ, ಹೊಮಾಲೆ ಹಾಕಿದ ನಂತರ ಜನರತ್ತ ಗೆಲುವಿನ ಕೈಬಿಸಿದರು.
ಶಿಗ್ಗಾವಿ ಪಟ್ಟಣದ ಪುರಸಭೆ ವೃತ್ತದಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪ ಅರ್ಪಿಸಿ, ಹೊಮಾಲೆ ಹಾಕಿದ ನಂತರ ಜನರತ್ತ ಗೆಲುವಿನ ಕೈಬಿಸಿದರು.   

ಶಿಗ್ಗಾವಿ: ರಾಜ್ಯದಲ್ಲಿ ಶಿಗ್ಗಾವಿ ಪಟ್ಟಣವನ್ನು ಮಾದರಿ ನಗರವನ್ನಾಗಿ ರೂಪಿಸುವ ಸಂಕಲ್ಪ ನಮ್ಮದಾಗಿದೆ. ಅದಕ್ಕಾಗಿ ನಗರದ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಸದ್ಯದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದಲ್ಲಿ ಪುರಸಭೆ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿ+1 ಮನೆಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಸದ್ಯದಲ್ಲಿ ಪೂರ್ಣಗೊಳಿಸಲಾಗುತ್ತಿದೆ. 24 ಗಂಟೆಗಳ ಕಾಲ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಮಾಡುವುದು ಅವರ್ಶಯವಾಗಿದ್ದು, ಪುರಸಭೆ ಸರ್ವ ಸದಸ್ಯರು ಒಂದಾಗಿ ಅಭಿವೃದ್ಧಿಗೆ ಕೈಜೋಡಿಸಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತ ಗತಿಯಲ್ಲಿ ಮಾಡಿರಿ ಎಂದು ಸಲಹೆ ನೀಡಿದರು.

ADVERTISEMENT

ಕಿತ್ತೂರ ರಾಣಿ ಚನ್ನಮ್ಮ ಮೂರ್ತಿ ಪುರಸಭೆ ವೃತ್ತದಲ್ಲಿ ಸ್ಥಾಪಿಸಬೇಕೆಂಬ ಬಹುದಿನಗಳ ಕನಸು ನನಸಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅಂದು ಚನ್ನಮ್ಮ ಹೋರಾಡಿದರು. ಇಂದು ಮೂರ್ತಿ ಪ್ರತಿಷ್ಠಾಪನೆಗೆ ಹೋರಾಡಬೇಕಾಯಿತು. ನ್ಯಾಯಲಯದಲ್ಲಿ ಜಯಗಳಿಸಲು ಸಾಧ್ಯವಾಯಿತು. ಶಿಗ್ಗಾವಿ ಬಂದಾಗಲೆಲ್ಲ ನಾವು ಚನ್ನಮ್ಮನ ಮೂರ್ತಿಗೆ ಪೂಜಿಸಿ ಉಳಿದ ಕಾರ್ಯ ಮಾಡುತ್ತೇನೆ. ಸಕಾರಾತ್ಮಕ ಚಿಂತನೆ ನಮ್ಮದಾಗಬೇಕು. ಒಂದು ತಿಂಗಳು ಚುನಾವಣೆ ಮಾಡೋಣ, ನಂತರ ಜನರಪರ ಯೋಜನೆಗಾಗಿ ಶ್ರವಹಿಸಿ ಕಾರ್ಯ ಮಾಡೋಣ ಎಂದರು.

ವಿಧಾನ ಪರಿಷತ್ತು ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವ ಸಿ.ಸಿ.ಪಾಟೀಲ, ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ, ಉಪಾಧ್ಯಕ್ಷ ಮಂಜುನಾಥ ಬ್ಯಾಹಟ್ಟಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಣ್ಣ ಸಾತಣ್ಣವರ, ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಬಾಗೂರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಸೇರಿದಂತೆ ಪುರಸಭೆ ಸರ್ವ ಇದ್ದರು.

ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಪಟ್ಟಣದಲ್ಲಿ ಪ್ರವಾಸಿ ಮಂದಿರ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಪೊಲೀಸ್ ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಹಳೆ ಬಸ್ ನಿಲ್ದಾಣದ ಬಳಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಕೆಸಿಸಿ ಬ್ಯಾಂಕ್ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ, ಕೃಷಿ ಮಾರಾಟ ಇಲಾಖೆ ಮೂಲಕ ಗೋದಾಮು ಉದ್ಘಾಟಿಸಿ ಹಾಗೂ ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.