ADVERTISEMENT

ಹಾವೇರಿ | ಜಿಲ್ಲಾಡಳಿತದಿಂದ ಸರಳ ಸ್ವಾತಂತ್ರ್ಯೋತ್ಸವ ನಾಳೆ

ಕೋವಿಡ್‌ ಹಿನ್ನೆಲೆ ಮನರಂಜನಾ ಕಾರ್ಯಕ್ರಮ ರದ್ದು: ಚಿಕ್ಕಮಕ್ಕಳು, ಹಿರಿಯ ನಾಗರಿಕರಿಗಿಲ್ಲ ಅವಕಾಶ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2020, 16:19 IST
Last Updated 13 ಆಗಸ್ಟ್ 2020, 16:19 IST

ಹಾವೇರಿ: 74ನೇ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಗಸ್ಟ್ 15ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 7.45ಕ್ಕೆ ಎಲ್ಲ ಗಣ್ಯರು ಹಾಗೂ ಅಧಿಕಾರಿಗಳು ಹುತಾತ್ಮ ಮೈಲಾರ ಮಹಾದೇವ ವೃತ್ತದಲ್ಲಿರುವ ಮೈಲಾರ ಮಹಾದೇವರ ಪ್ರತಿಮೆಗೆ ಮಾರ್ಲಾಪಣೆ ಮಾಡಲಿದ್ದಾರೆ.ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಳಿಗ್ಗೆ 9.05ಕ್ಕೆ ಪಥ ಪರಿವೀಕ್ಷಣೆ, 9-15ಕ್ಕೆ ಪಥ ಸಂಚಲನ, 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ ಹಾಗೂ 10 ಗಂಟೆಗೆ ಕರೋನಾ ವಾರಿಯರ್ಸ್‌ಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕೋವಿಡ್ ಮಾರ್ಗಸೂಚಿಯಂತೆ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ 10 ವರ್ಷದೊಳಗಿನ ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆರೋಗ್ಯದ ದೃಷ್ಟಿಯಿಂದ ಕ್ರೀಡಾಂಗಣದಲ್ಲಿ ಸೇರದಿರಲು ತಿಳಿಸಲಾಗಿದೆ. ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗುತ್ತದೆ.

ADVERTISEMENT

ಕೋವಿಡ್ -19 ಸೋಂಕಿನ ಹಿನ್ನಲೆಯಲ್ಲಿ ಈ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಸಾಮೂಹಿಕ ಕವಾಯತು, ವಿದ್ಯಾರ್ಥಿಗಳ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ. ಅಂತರ ಕಾಯ್ದುಕೊಂಡು ಸಿಮಿತ ಸಂಖ್ಯೆಯಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19 ವಾರಿಯರ್ಸ್‍ಗಳಾದ ವೈದ್ಯರು, ಆರೋಗ್ಯ ಕಾರ್ಯಕರ್ತರು, ಸ್ವಚ್ಛತಾ ಸಿಬ್ಬಂದಿ, ರಕ್ಷಣಾ ಇಲಾಖೆಯವರು ಸೇರಿದಂತೆ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಕಾರ್ಯನಿರ್ವಹಿಸುತ್ತಿರವವನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಗೌರವಿಸಲು ನಿರ್ಧರಿಸಲಾಗಿದೆ.

ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ನೆಹರು ಓಲೇಕಾರ ಅವರು ವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಕೃಷಿ ಸಚಿವ ಬಿ.ಸಿ.ಪಾಟೀಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಜಿ.ಪಂ.ಅಧ್ಯಕ್ಷ ಬಸನಗೌಡ ದೇಸಾಯಿ, ಸಂಸದ ಶಿವಕುಮಾರ ಉದಾಸಿ, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.