ADVERTISEMENT

ಅಭಿವೃದ್ಧಿಗೆ ಪೂರಕ ಬಜೆಟ್‌: ಸಿದ್ದರಾಜ ಕಲಕೋಟಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2021, 11:44 IST
Last Updated 10 ಮಾರ್ಚ್ 2021, 11:44 IST
ಸಿದ್ದರಾಜ ಕಲಕೋಟಿ
ಸಿದ್ದರಾಜ ಕಲಕೋಟಿ   

ಹಾವೇರಿ: ಕೋವಿಡ್‌ ಸಂಕಷ್ಟದ ಸಮಯದಲ್ಲೂ ಜನಪರ ಯೋಜನೆಗಳ ಮೂಲಕ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಅನ್ನುಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿಯ ಯೋಜನೆ, ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಶೇ 40ರಿಂದ ಶೇ 50ಕ್ಕೆ ಮೀಸಲಾತಿ ಹೆಚ್ಚಳ, ಸಣ್ಣ ಟ್ರ್ಯಾಕ್ಟರ್‌ಗೆ ನೀಡುತ್ತಿದ್ದ ಸಹಾಯಧನವನ್ನು 45 ಪಿಟಿಒ ಎಚ್‌.ಪಿ. ಟ್ರ್ಯಾಕ್ಟರ್‌ಗಳಿಗೂ ವಿಸ್ತರಣೆ ಸೇರಿದಂತೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ₹21 ಸಾವಿರ ಕೋಟಿ ಅನುದಾನ, ಕೃಷ್ಣಭಾಗ್ಯ ಜಲನಿಗಮದ ಎಲ್ಲ ಯೋಜನೆಗಳಿಗೆ ಒಟ್ಟು 5500 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಕರ್ನಾಟಕ ಪಬ್ಲಿಕ್‌ ಶಾಲೆಗಳ ಅಭಿವೃದ್ಧಿಗೆ ₹100 ಕೋಟಿ ಅನುದಾನ, ಆರೋಗ್ಯ ಸೇವೆ ಬಲಪಡಿಸಲು 250 ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ... ಹೀಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮುಖ್ಯಮಂತ್ರಿ ಒತ್ತು ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲೆಯ ಬ್ಯಾಡಗಿ ಮಾರುಕಟ್ಟೆಗೆ ‘ಆಧುನಿಕ ಗುಣವಿಶ್ಲೇಷಣಾ ಘಟಕ’ ಹಾಗೂ ಶಿಗ್ಗಾವಿಯ ಕೆಎಸ್‌ಆರ್‌ಪಿ ಬೆಟಾಲಿಯನ್‌ ಸಶಕ್ತಗೊಳಿಸಲು ₹8 ಕೋಟಿ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈಗಾಗಲೇ ಹಾನಗಲ್‌ ವಿಧಾನಸಭಾ ಕ್ಷೇತ್ರಕ್ಕೆ ₹12 ಕೋಟಿ, ಬ್ಯಾಡಗಿ–₹950 ಕೋಟಿ, ಶಿಗ್ಗಾವಿ– ₹700 ಕೋಟಿ, ಹಿರೇಕೆರೂರು– ₹455 ಕೋಟಿ, ರಾಣೆಬೆನ್ನೂರು– ₹321 ಕೋಟಿ ಹಾಗೂ ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ 700 ಕೋಟಿ ಅನುದಾನ ನೀಡಿದ್ದಾರೆ ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗಿರೀಶ ತುಪ್ಪದ, ಪ್ರದೀಪ ಮುಳ್ಳೂರ, ಶಶಿಧರ ಹೊಸಹಳ್ಳಿ, ಪ್ರಭು ಹಿಟ್ನಳ್ಳಿ, ಕಿರಣ ಕೋಣನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.