ಹಾವೇರಿ: ಭೂವೀರಾಪುರದ ಸಮೀಪಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ಕಟ್ಟಡಕ್ಕೆ ಶನಿವಾರ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ವಸತಿಶಾಲೆಯ ಬಳಿ ನಡೆಸಲಾಗುತ್ತಿರುವ ಕಲ್ಲು ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಸಚಿವರು ಹಾಗೂ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಸತಿ ಶಾಲೆಯ ಬಳಿ ಗಣಿಗಾರಿಕೆ ನಡೆಸುವುದರಿಂದ ಕಲ್ಲು ಸಿಡಿದು ಅಪಾಯ ಸಂಭವಿಸುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪತ್ರ ಬರೆಯುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಟ್ಟಡ ಕಾಮಗಾರಿಯ ಕೆಲವು ಹಂತಗಳನ್ನು ಪರಿಶೀಲಿಸಿದ ಸಚಿವ ಶ್ರೀಮಂತ ಪಾಟೀಲ, ಶಾಸಕ ನೆಹರು ಓಲೇಕಾರ ಅವರು, ಬಾಲಕರ ವಸತಿ ನಿಲಯ, ಬಾಲಕಿಯರ ವಸತಿ ನಿಲಯ, ಭೋಜನಾಲಯದ ಸಂಕೀರ್ಣದ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಕಿಟಿಕಿ, ಬಾಗಿಲುಗಳಿಗೆ ಗುಣಮಟ್ಟದ ಕಬ್ಬಿಣ ಹಾಗೂ ಅಲ್ಯೂಮಿನಿಯಂ ಬಳಸಲು ಸೂಚಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ನಗರಸಭೆ ಮಾಜಿ ಅಧ್ಯಕ್ಷ ಜಗದೀಶ ಮಲಗೋಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.