ಸವಣೂರು: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಉದ್ದೇಶದಿಂದ ಸಚಿವರು ರಾಜ್ಯದಲ್ಲಿ 800 ಕೆಪಿಎಸ್ಸಿ ಶಾಲೆ ನೀಡುತ್ತಿದ್ದಾರೆ. ಅದರಲ್ಲಿ, ಸವಣೂರು-ಶಿಗ್ಗಾವಿ ಕ್ಷೇತ್ರಕ್ಕೆ 5 ಶಾಲೆ, ಅದರಂತೆ, ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ತಿಳಿಸಿದರು.
ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಜರುಗಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಗುರುಭವನ ನಿರ್ಮಾಣಕ್ಕೆ ಪುರಸಭೆ 10 ಗುಂಟೆ ಜಾಗ ನೀಡಿದೆ. ಮಾದಾಪುರ ಸರಹದ್ದಿನಲ್ಲಿ 7 ಎಕರೆ ನೀಡಲಾಗುವುದು ಅದಕ್ಕೆ ₹ 17 ಕೋಟಿ ಅನುದಾನ ನೀಡಲಾಗಿದೆ. ಶೀಘ್ರ ಕೆಲಸ ಆರಂಭಿಸುತ್ತೇವೆ’ ಎಂದು ಹೇಳಿದರು.
ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮೀಜಿ ಹಾಗೂ ದೊಡ್ಡಹುಣಸೇ ಕಲ್ಮಠದ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಡಿಡಿಪಿಐ ಎಂ.ಎನ್.ದಂಡಿನ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷ ಅಲ್ಲಾವುದ್ದೀನ್ ಮನಿಯಾರ್, ಪಂಚ ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ಸುಭಾಸ ಮಜ್ಜಗಿ, ಕೆಡಿಪಿ ಸದಸ್ಯ ರವಿ ಕರಿಗಾರ, ತಹಶೀಲ್ದಾರ ರವಿ ಕೊರವರ, ತಾ.ಪಂ. ಇಒ ಬಿ.ಎಸ್.ಶಿಡೇನೂರ, ಬಿಇಒ ಎಂ.ಎಫ್.ಬಾರ್ಕಿ, ಬಿಆರ್ಸಿ ಸಮನ್ವಯಾಧಿಕಾರಿ ಎಂ.ಎನ್.ಅಡಿವೆಪ್ಪನವರ, ದೈಹಿಕ ಶಿಕ್ಷಣಾಧಿಕಾರಿ ಎಸ್.ವಿ.ಬಳಿಗಾರ, ಪುರಸಭೆ ಮುಖ್ಯಾಧಿಕಾರಿ ಎನ್.ಎಂ.ಹಾದಿಮನಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಬಸವರಾಜ ಹೊಸಮನಿ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.