ಹಾವೇರಿ:ತಂಬಾಕು ಅಕ್ರಮ ಮಾರಾಟ ನಿಯಂತ್ರಣಕ್ಕೆ ತಂಡ ರಚಿಸಲಾಗಿದ್ದು, ಶೀಘ್ರ ಕಾರ್ಯಾಚರಣೆ ನಡೆಸಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಗುರುವಾರ ‘ತಂಬಾಕು ಸೇವನೆ ನಿಯಂತ್ರಣ ಹಾಗೂ ಕೊಪ್ಟಾ ಕಾಯ್ದೆ 2003’ ರ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಸೇವನೆ ಮಾಡಿದವರಿಗೆ ದಂಡ ವಿಧಿಸಲಾಗುವುದು. ಇವುಗಳ ಕುರಿತು ಮಕ್ಕಳಲ್ಲಿ, ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಸಂತೋಷ ಮಾತನಾಡಿ, ಭಾರತ ಸರ್ಕಾರವು 2007–08ರಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ. 18 ವರ್ಷ ಒಳಗಿನವರಿಗೆ ತಂಬಾಕು ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಇದು ಅಪರಾಧವಾಗಿದ್ದು, ದಂಡ ಹಾಗೂ ಶಿಕ್ಷೆ ನೀಡಲಾಗುವುದು ಎಂದರು.
ತಂಬಾಕು ಸೇವನೆಯಿಂದ ವಿವಿಧ ರೀತಿಯ ಕ್ಯಾನ್ಸರ್ ಬರುತ್ತವೆ. ತಂಬಾಕಿನಿಂದ ಮುಕ್ತಿ ಪಡೆಯುವುದಕ್ಕಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನ ಮುಕ್ತಿ ಕೇಂದ್ರವನ್ನು ಆರಂಭಿಸಲಾಗಿದೆ. ಸಂಬಂಧ ಪಟ್ಟವರನ್ನು ಚಿಕಿತ್ಸೆಗೆ ಒಳಪಡಿಸಬಹುದಾಗಿದೆ ಎಂದರು.
ಮಕ್ಕಳಿಂದ ತಂಬಾಕು ಮಾರಾಟ ಮಾಡಿಸುವುದು ಹಾಗೂ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ಸ್ ಅಂತರದ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ನೀಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘನೆ ಮಾಡಿದರೆ ₹200ದಂಡ ವಿಧಿಸಲಾಗುವುದು ಎಂದರು
ಮನೋತಜ್ಞ ಡಾ.ಮನು ಬಳಿಗಾರ, ನೋಡಲ್ ಅಧಿಕಾರಿ ಜಗದೀಶ್, ಮಾಲತೇಶ್, ಶಂಕರ ಸುತಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.