ಹಾವೇರಿ:ರಾಜ್ಯ ಬಜೆಟ್ನಲ್ಲಿ ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ ವಿತರಿಸುವ ಯೋಜನೆಯನ್ನು ಅಳವಡಿಸಲು ಚಿಂತನೆ ನಡೆದಿದೆ. ಸರ್ಕಾರಕ್ಕೆ ಈ ಕುರಿತಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮತ್ಸದರ್ಶಿನಿ’ ಯೋಜನೆಯಡಿ ರಾಜ್ಯದಲ್ಲೆಡೆ ಹೋಟೆಲ್ಗಳನ್ನು ಮೀನುಗಾರಿಕೆ ಇಲಾಖೆಯಿಂದ ತೆರೆಯಲಾಗುವುದು. ಜನತೆಗೆ ಮೀನು ಖಾದ್ಯಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೊಸ ಸೂತ್ರ:
‘ಮೀನು ಸಾಕಾಣಿಕೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಕೆರೆ ಮತ್ತು ಜಲಾಶಯಗಳನ್ನು ಗುತ್ತಿಗೆ ನೀಡುವ ಪದ್ಧತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು.ಜಲಮೂಲಗಳ ವಿಲೇವಾರಿಗೆ ರಾಜ್ಯದಲ್ಲಿ ಹೊಸ ಸೂತ್ರ ಅಳವಡಿಸಿಕೊಳ್ಳಲು ಚಿಂತನೆ ನಡೆದಿದೆ’ ಎಂದರು.
ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಟೆಂಡರ್ ಕರೆಯಬೇಕೇ ಅಥವಾ ಪಂಚಾಯಿತಿ ಮಟ್ಟದಲ್ಲಿ ಹರಾಜು ಹಾಕಬೇಕೇ ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಮುಖಸ್ಥರನ್ನಾಗಿ ಮಾಡಿ, ಎ, ಬಿ ಹಾಗೂ ಸಿ ದರ್ಜೆಯ ಕೆರೆಗಳನ್ನಾಗಿ ವರ್ಗೀಕರಿಸಲಾಗುವುದು. ಮೀನುಗಾರರ ಸಂಘ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಆರ್ಥಿಕ ದುರ್ಬಲರಿಗೂ ಇಂತಿಷ್ಟು ಕೆರೆಗಳೆಂದು ಮೀಸಲಿರಿಸಿ ಗುತ್ತಿಗೆ ನೀಡಲಾಗುವುದು. ಕೆರೆಗಳ ವರ್ಗೀಕರಣ ಕಾರ್ಯವನ್ನು ಹಾವೇರಿಯಿಂದಲೇ ಆರಂಭಿಸಲಾಗುವುದು. ಇಲ್ಲಿ ಯಶಸ್ಸಿಯಾದರೆ ಈ ಸೂತ್ರವನ್ನೇ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಳವಡಿಸಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.