
ಶ್ರೀನಿವಾಸ ಮಾನೆ
ಹಾನಗಲ್: ರಾಜ್ಯದಲ್ಲಿ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಮೂಲಸೌಕರ್ಯ ಒದಗಿಸಿ ಕಲಿಕಾ ಗುಣಮಟ್ಟ ಹೆಚ್ಚಿಸಲು ಸರ್ಕಾರ ಮುಂದಾಗಿದ್ದು, ತಾಲ್ಲೂಕಿನ 6 ಉರ್ದು ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಭಾನುವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, ಬೆಳಗಾಲಪೇಟೆ ಗ್ರಾಮದ ಆರ್.ಎಂ.ಎಸ್.ಎ. ಉನ್ನತೀಕರಿಸಿದ ಉರ್ದು ಪ್ರೌಢಶಾಲೆ, ಅಕ್ಕಿಆಲೂರಿನ ಸರ್ಕಾರಿ ಉರ್ದು ಪ್ರೌಢಶಾಲೆ, ಹಾನಗಲ್ನ ದರ್ಗಾದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಸುರಳೇಶ್ವರ ರಸ್ತೆಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆ, ಕಂಚಿನೆಗಳೂರಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಅಕ್ಕಿಆಲೂರಿನ ಪಿಎಂಶ್ರೀ ಸರ್ಕಾರಿ ಉರ್ದು ಹೆಣ್ಣುಮಕ್ಕಳ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ 6 ಶಾಲೆಗಳಲ್ಲಿ ಕೊಠಡಿ, ಶೌಚಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಇತರ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮೊದಲ ಹಂತದಲ್ಲಿ ತಲಾ ಶಾಲೆಗೆ ಒಂದು ಕೋಟಿ ಅನುದಾನ ಸಹ ದೊರಕಲಿದೆ.
ಇತ್ತೀಚಿಗೆ ಸರ್ಕಾರ ತಾಲ್ಲೂಕಿನ ಬೆಳಗಾಲಪೇಟೆ, ಚಿಕ್ಕಾಂಶಿ ಹೊಸೂರು ಮತ್ತು ಬಮ್ಮನಹಳ್ಳಿ ಗ್ರಾಮಗಳ ಸರ್ಕಾರಿ ಪ್ರೌಢಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಿದೆ.
ಹಾನಗಲ್, ಅಕ್ಕಿಆಲೂರು ಮತ್ತು ಮಂತಗಿ ಗ್ರಾಮಗಳಲ್ಲಿ ಹೊಸದಾಗಿ ಸರ್ಕಾರಿ ಪ್ರೌಢಶಾಲೆಗಳನ್ನು ಮಂಜೂರಿ ಮಾಡಿದೆ. 7 ಶಾಲೆಗಳಲ್ಲಿ ಎಲ್.ಕೆ.ಜಿ. ಯು.ಕೆ.ಜಿ. ಮತ್ತು 27 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವ ಮೂಲಕ ಮಹತ್ತರ ಕೊಡುಗೆ ನೀಡಿದೆ ಎಂದು ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.