ಹಾವೇರಿ: ಅಲ್ಪಸಂಖ್ಯಾತ ಸಮುದಾಯದವರು ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಬಾನುವಳ್ಳಿ ಸಲಹೆ ನೀಡಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಅಲ್ಪಸಂಖ್ಯಾತರ ಶಿಕ್ಷಣ ಇಲಾಖೆ, ಕರ್ನಾಟಕ ಉರ್ದು ಅಕಾಡೆಮಿ ಆಶ್ರಯದಲ್ಲಿ ಏರ್ಪಡಿಸಿದ್ದ ‘ಜಿಲ್ಲಾ ಮಟ್ಟದ ಉರ್ದು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಲವಾರು ಸರ್ಕಾರಿ ಯೋಜನೆಗಳಿಗೆ ಅರ್ಜಿಗಳೇ ಬರುತ್ತಿಲ್ಲ. ಇದರಿಂದ ಮೀಸಲಿಟ್ಟ ಅನುದಾನ ವಾಪಸ್ ಹೋಗುತ್ತದೆ. ಹಾಗಾಗಿ ಅಲ್ಪಸಂಖ್ಯಾತ ಸಮಾಜದಲ್ಲಿರುವ ವಿದ್ಯಾವಂತರು ಸರ್ಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಶ್ರಮಿಸಬೇಕು. ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ಅರ್ಜಿ ಹಾಕಿಸಬೇಕು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಮುಂದಾಗಬೇಕು ಎಂದು ಹೇಳಿದರು.
ಡಿಡಿಪಿಐ ಅಂದಾನಪ್ಪ ವಡಗೇರಿ ಮಾತನಾಡಿ, ‘ಇಲ್ಲಿ ಏರ್ಪಡಿಸಿರುವ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಜಲ್, ಪ್ರಬಂಧ, ಚರ್ಚಾಸ್ಪರ್ಧೆಗಳಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಬಹುಮಾನ ಗೆಲ್ಲಬೇಕು. ಶ್ರದ್ಧೆ ಮತ್ತು ಆಸಕ್ತಿಯಿಂದ ವ್ಯಾಸಂಗವನ್ನು ಮಾಡಿ, ಉತ್ತಮ ಸಾಧನೆ ಮಾಡಬೇಕು ಎಂದು ತಿಳಿ ಹೇಳಿದರು.
ಡಯಟ್ ಉಪ ಪ್ರಾಂಶುಪಾಲ ಝಡ್.ಎಂ. ಖಾಜಿ ಮಾತನಾಡಿ, ‘ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಹಾಗಾಗಿ ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕೊಡಿಸಿ. ಅವರ ಭವಿಷ್ಯವನ್ನು ಸುಂದರಗೊಳಿಸಿ’ ಎಂದು ಸಲಹೆ ನೀಡಿದರು.
ಶಿಕ್ಷಣಾಧಿಕಾರಿ ಎನ್.ಶ್ರೀಧರ್, ಬಿಇಒ ಎಂ.ಎಚ್.ಪಾಟೀಲ್, ಕನ್ನಡ ವಿಷಯ ಪರಿವೀಕ್ಷಕ ಈರಪ್ಪ ಲಮಾಣಿ, ಸಿಕಂದರ್ ಮುಲ್ಲಾ ಮುಂತಾದವರು ಇದ್ದರು. ನಾಗರಾಜ ನಡುವಿನಮನಿ ಕಾರ್ಯಕ್ರಮ ನಿರೂಪಣೆ ಮಾಡಿದರು.ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.