ADVERTISEMENT

ಕೋವಿಡ್‌ ಕುರಿತ ಸಭೆ: ಕೋವಿಡ್ ಕರ್ತವ್ಯಕ್ಕೆ ಗೈರಾದರೆ ಮೊಕದ್ದಮೆ

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 15:59 IST
Last Updated 29 ಏಪ್ರಿಲ್ 2021, 15:59 IST
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ‘ಮುಖ್ಯಮಂತ್ರಿ ಅವರೊಂದಿಗಿನ ವಿಡಿಯೊ ಸಂವಾದ’ದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ   
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ‘ಮುಖ್ಯಮಂತ್ರಿ ಅವರೊಂದಿಗಿನ ವಿಡಿಯೊ ಸಂವಾದ’ದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ      

ಹಾವೇರಿ: ಕೋವಿಡ್-19 ಎರಡನೇ ಅಲೆಯ ನಿಯಂತ್ರಣ ನಿಟ್ಟಿನಲ್ಲಿ ವಿವಿಧ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ನೌಕರರು ಗೈರಾದರೆ ವಿಪತ್ತು ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗುವುದುಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಎಚ್ಚರಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ನಂತರ ಕೋವಿಡ್ ನಿಯಂತ್ರಣ ದೈನಂದಿನ ಪ್ರಗತಿ ಮಾಹಿತಿ ಪಡೆದುಕೊಂಡ ಅವರು ಕೋವಿಡ್ ಕರ್ತವ್ಯಕ್ಕೆ ನೇಮಕಗೊಂಡವರು ಗೈರಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ಬಂದವರ ಮಾಹಿತಿ ಸಂಗ್ರಹ ತಪಾಸಣೆ, ಸೋಂಕಿತರ ಸಂಪರ್ಕ ಪತ್ತೆ ಕಾರ್ಯ ತ್ವರಿತಗೊಳಿಸಿ ನಿಖರವಾಗಿ ದಾಖಲಿಸುವ ಕಾರ್ಯವನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಕೋವಿಡ್ ಪ್ರಕರಣಗಳ ನಿರ್ವಹಣೆಗೆ ಜಿಲ್ಲೆಗೆ ಅಗತ್ಯವಾಗಿ ಬೇಕಾದ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ಸರ್ಕಾರದ ಮಾರ್ಗಸೂಚಿಯಂತೆ ತಾತ್ಕಾಲಿಕವಾಗಿ ನೇಮಕ ಮಾಡಿಕೂಳ್ಳಿ. ಎಂಬಿಬಿಎಸ್‌ ವೈದ್ಯರು ದೊರೆಯದಿದ್ದರೆ ಬಿಡಿಎಸ್ ದಂತ ವೈದ್ಯರು, ಆಯುಷ್‌ ವೈದ್ಯರನ್ನ ನೇಮಕ ಮಾಡಿಕೊಳ್ಳಿ. ತಾಂತ್ರಿಕ ಸಮಿತಿಯಿಂದ ನಿಯಮಾನುಸಾರ ಅನುಮೋದನೆ ಪಡೆದುಕೊಳ್ಳಲು ಸೂಚನೆ ನೀಡಿದರು.

ಸೋಂಕಿತರ ಸಂಪರ್ಕ ಪತ್ತೆ, ಟ್ರ್ಯಾಕಿಂಗ್, ಐಸೋಲೇಷನ್‌ ದಾಖಲೀಕರಣ ಕಾರ್ಯದ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಕಾರ್ಯಕ್ಕೆ ನಿಯೋಜನೆ ಗೊಂಡಿರುವ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸಿಬ್ಬಂದಿ ಸಮನ್ವಯತೆಯಿಂದ ಕೆಲಸ ಮಾಡಬೇಕು. ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ ಎಂದು ತಾಕೀತು ಮಾಡಿದರು.

‘ಮುಖ್ಯಮಂತ್ರಿ ಅವರೊಂದಿಗಿನ ವಿಡಿಯೊ ಸಂವಾದ’ದಲ್ಲಿ ಬೆಂಗಳೂರಿನಿಂದರಾಜ್ಯ ಸರ್ಕಾದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ‘ಅಗತ್ಯವಾದ ವೈದ್ಯಕೀಯ ಸಾಮಗ್ರಿಯನ್ನು ಸ್ಥಳೀಯವಾಗಿಯೇ ಖರೀದಿಸಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗೆ ಎಲ್ಲಾ ಅಧಿಕಾರ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಿಗೆ ಸರ್ಕಾರದಿಂದ ಎಲ್ಲ ನೆರವು ನೀಡಲಾಗುವುದು’ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ. ದೇವರಾಜ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ ವಿಜಯಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.