ಹಿರೇಕೆರೂರು (ಹಾವೇರಿ): ‘ರಟ್ಟೀಹಳ್ಳಿ ಪಟ್ಟಣದಲ್ಲಿ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ. ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಇದು ಮೂಲಭೂತವಾದದ ಮಾನಸಿಕತೆಯನ್ನು ತೋರಿಸುತ್ತದೆ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಹಳೇಪೇಟೆ ಇದೇನು ಪಾಕಿಸ್ತಾನ ಅಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು.
ರಟ್ಟಿಹಳ್ಳಿಯಲ್ಲಿ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತನ ಮನೆಗೆ ಶುಕ್ರವಾರ ಭೇಟಿ ನೀಡಿದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
‘ರಟ್ಟಿಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಾಥಮಿಕ ಶಿಕ್ಷಾ ವರ್ಗ ನಡೆಯುತ್ತಿದೆ. ರಾಷ್ಟ್ರಭಕ್ತಿಯ ಬಗ್ಗೆ ಜಾಗೃತಿ ಮೂಡಿಸುವ ಶಿಬಿರ ಇದಾಗಿತ್ತು. ಪಥಸಂಚಲನದ ರೂಟ್ ಮ್ಯಾಪ್ ಪರಿಶೀಲನೆ ವೇಳೆ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರುವುದು ದುರದೃಷ್ಟಕರ ಘಟನೆ. ಅಡ್ಡಗಟ್ಟಿ ವಿನಾಕಾರಣ ಹಲ್ಲೆ ಮಾಡಿದ್ದಾರೆ. ಘಟನೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿ, 25 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.
ಹಲ್ಲೆಗೊಳಗಾದ ಮುಖಂಡರ ಜೊತೆ ಮಾತನಾಡಿದ್ದೇನೆ. ಮತೀಯವಾದದ ಗಲಭೆ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯ ಸಂಕಲ್ಪ ಯಾತ್ರೆ ಸುಳ್ಳಿನ ಯಾತ್ರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಹುಟ್ಟಾ ಸುಳ್ಳುಗಾರ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ. ನಾನು ಸಿದ್ದರಾಮಣ್ಣ ಎಂದು ಹೇಳುವುದನ್ನು ಹೊರತುಪಡಿಸಿದರೆ ಅವರು ಹೇಳುವುದು ಎಲ್ಲಾ ಸುಳ್ಳೆ’ ಎಂದು ಲೇವಡಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.