ಹಾವೇರಿ: ‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಆಯಾ ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿಯೇ ಕಡ್ಡಾಯವಾಗಿ ವಾಸ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಆದೇಶಿಸಿದ್ದಾರೆ.
ಅವಶ್ಯ ಸೇವೆಗಳಾದ ಕುಡಿಯುವ ನೀರು, ನೈರ್ಮಲ್ಯ ಇತ್ಯಾದಿ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ಒದಗಿಸುವುದು ಆದ್ಯ ಕರ್ತವ್ಯವಾಗಿದ್ದು, ಪಿಡಿಒಗಳು ಮತ್ತು ಗ್ರಾ.ಪಂ. ಕಾರ್ಯದರ್ಶಿಗಳು ಕಚೇರಿ ಕೆಲಸ ಆರಂಭವಾಗುವ ಮುನ್ನ ಬೆಳಿಗ್ಗೆ ಮತ್ತು ಸಂಜೆ ಕಚೇರಿ ವೇಳೆ ಮುಗಿದ ನಂತರವೂ ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲೆಯ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕಚೇರಿಗೆ ಸರಿಯಾದ ವೇಳೆಗೆ ಬರುತ್ತಿಲ್ಲ, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಜನರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಡುತ್ತಿಲ್ಲ ಎಂಬ ಸಾರ್ವಜನಿಕರ ದೂರುಗಳನ್ನು ಆಧರಿಸಿ, ‘ಪ್ರಜಾವಾಣಿ’ಯಲ್ಲಿ ‘ಗ್ರಾಮಸ್ಥರಿಗೆ ಸಿಗದ ಪಿಡಿಒ; ತಪ್ಪದ ಅಲೆದಾಟ’ ಎಂಬ ಶೀರ್ಷಿಕೆಯಡಿ ‘ನಮ್ಮ ಜನ ನಮ್ಮ ಧ್ವನಿ’ ಅಂಕಣದ ಮೂಲಕ ಬೆಳಕು ಚೆಲ್ಲಲಾಗಿತ್ತು.
ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಸಿಇಒ ರೋಷನ್ ಮೊಹಮ್ಮದ್ ಅವರು ಮಾರ್ಚ್ 19ರಂದು ಸುತ್ತೋಲೆ ಹೊರಡಿಸಿ, ಕ್ರಮ ಕೈಗೊಂಡಿದ್ದಾರೆ. ಇದಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.