ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ರೈತರ ನೆರವಿಗಾಗಿ ‘ತೆಂಗು ಅಭಿವೃದ್ಧಿ ಮಂಡಳಿ’ಗೆ ಕೇಂದ್ರ ಸರ್ಕಾರ 2016–17ನೇ ಸಾಲಿಗೆ ಬಿಡುಗಡೆ ಮಾಡಿದ್ದ ₹ 5.08 ಕೋಟಿ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಎಫ್ಐಆರ್ದಾಖಲಿಸಿದೆ.
ಈ ಸಂಬಂಧ ತೆಂಗು ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಹೇಮಚಂದ್ರ ಮತ್ತು ತಾಂತ್ರಿಕ ಅಧಿಕಾರಿ ಸಿಮಿ ಥಾಮಸ್ ಅವರನ್ನು ಅಮಾನತುಗೊಳಿಸಲಾಗಿದೆ. ತೆಂಗು ಉತ್ಪಾದನೆ ಪ್ರೋತ್ಸಾಹಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೆರವು ನೀಡಲು ಈ ಹಣ ಬಿಡುಗಡೆ ಮಾಡಲಾಗಿತ್ತು.
ತೆಂಗು ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಈ ಹಣದಿಂದ ತೋಟಗಾರಿಕೆ ಉಪಕರಣಗಳನ್ನು ಖರೀದಿಸಿದ್ದರು. ಅನಧಿಕೃತ ವಿತರಕರಿಂದ ಖರೀದಿಸಿದ್ದ ಉಪಕರಣಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸದೆ, ನಕಲಿ ದಾಖಲೆ ಸೃಷ್ಟಿಸಿದ್ದರು. ಈ ಸಂಬಂಧ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿತ್ತು. ಆರೋಪಿಗಳು ಭಾರತ ದಂಡಸಂಹಿತೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅಪರಾಧ ಎಸಗಿದ್ದು ತನಿಖೆಯಿಂದ ಖಚಿತವಾಗಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಅಧಿಕಾರಿಗಳು ಭಾಗಿಯಾಗಿರುವುದು ಕಂಡುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.