ಬೆಂಗಳೂರು: ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎಷ್ಟು ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂಬುದರ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅನಧಿಕೃತ ಕಟ್ಟಡಗಳ ತೆರವು ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.
ಮೇಲ್ಮನವಿ ಪ್ರಾಧಿಕಾರ, ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎಷ್ಟು ದೂರುಗಳು ದಾಖಲಾಗಿವೆ, ದೂರುಗಳ ಆಧಾರದ ಮೇಲೆ ಅವುಗಳ ತೆರವಿಗೆ ಕೈಗೊಂಡ ಕ್ರಮಗಳೇನು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮಗಳೇನು ಎಂದು ಪ್ರಶ್ನಿಸಿದ ಪೀಠ, ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.
‘ಅನಧಿಕೃತ ಕಟ್ಟಡಗಳಿಗೆ ಸಂಬಂಧಿಸಿದ ದೂರು ಸ್ವೀಕರಿಸಲು ಯಾಂತ್ರೀಕೃತ ವ್ಯವಸ್ಥೆ ರೂಪಿಸಬೇಕು. ಕಟ್ಟಡ ನಿರ್ಮಾಣಗಳ ಮೇಲೆ ನಿಗಾವಹಿಸಲು ವಾರ್ಡ್ ಮಟ್ಟದಲ್ಲಿ ವಿಚಕ್ಷಣಾ ಅಧಿಕಾರಿಗಳನ್ನು ನೇಮಿಸಿ’ ಎಂದು ನಿರ್ದೇಶಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.