ಸೇಡಂ: ‘ಮೂರು ಬಾರಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದೇನೆ. ತಾಲ್ಲೂಕಿನಲ್ಲಿ ಪ್ರತಿಯೊಂದು ಗ್ರಾಮಕ್ಕೆ ರಸ್ತೆ, ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಮತಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ’ ಎಂದು ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಆಡಳಿತ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅಡಿಗಲ್ಲು ಹಾಕಿದ್ದು, ಅವು ಪ್ರಗತಿಯಲ್ಲಿವೆ. ಕಳಪೆ ಗುಣಮಟ್ಟದ ಕಾಮಗಾರಿ ಕಂಡು ಬಂದಲ್ಲಿ ಸಹಿಸುವುದಿಲ್ಲ. ಅದಕ್ಕೆ ಮೀಸಲಿಟ್ಟ ಹಣ ಸಂಪೂರ್ಣ ಖರ್ಚಾಗಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ಕೊಡುವುದಿಲ್ಲ’ ಎಂದು ಎಚ್ಚರಿಸಿದರು.
‘ಕ್ಷೇತ್ರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡದೆ ಅಭಿವೃದ್ಧಿ ಕೆಲಸಗಳಿಗೆ ಮತ್ತು ಕ್ಷೇತ್ರದ ಜನತೆಯ ಹಿತ ಕಾಪಾಡುವ ರಾಜಕೀಯ ಮಾಡಿದ್ದೇನೆ. ನನ್ನ ಮತಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುವುದಕ್ಕೆ ಬಿಡುವುದಿಲ್ಲ. ಸೌಹಾರ್ದತೆಯ ಆಡಳಿತ ಹಾಗೂ ಒಳ್ಳೆಯ ಕೆಲಸಕ್ಕೆ ಯಾವಾಗಲೂ ಸಹಕಾರ ಇರುತ್ತದೆ’ ಎಂದರು.
‘ಪ್ರತ್ಯೇಕ ಧರ್ಮ ಮಾನ್ಯತೆಗೆ ಪ್ರೋತ್ಸಾಹಿಸಿದ್ದಕ್ಕೆ ಸೋತಿದ್ದೇನೆ ಎನ್ನುವ ಮಾತು ಸತ್ಯಕ್ಕೆ ದೂರ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬೇಡಿಕೆ ಸಲ್ಲಿಸುವುದು ಸಹಜ. ಅದಕ್ಕೆ ಸರ್ಕಾರ ಸ್ಪಂದಿಸಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ಅಬ್ದುಲ್ ಗಫೂರ, ದತ್ತು ಪಾಟೀಲ ಇದ್ದರು.
ಕಣ್ಣೀರು ಹಾಕಿದರು
‘ಪಟ್ಟಣದ ಕೆಎನ್ಜೆಡ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಡಾ.ಶರಣ ಪ್ರಕಾಶ ಪಾಟೀಲ ಕಣ್ಣೀರು ಹಾಕಿದರು ಎನ್ನಲಾಗಿದೆ. ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುವ ಸಂದರ್ಭ ಕಣ್ಣೀರು ಹಾಕಿದ್ದಾರೆಂದು’ ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.