ಕಲಬುರ್ಗಿ: ‘ಮಲ್ಲಿಕಾರ್ಜುನ ಖರ್ಗೆ ಅವರು 50 ವರ್ಷ ರಾಜಕೀಯ ಮಾಡಿದ್ದಾರೆ. ನಾನು ಎರಡು ದಿನ ಅವರ ಕ್ಷೇತ್ರ ಸುತ್ತಿದ್ದೇನೆ. ನಮ್ಮ ಕಾರ್ಯಕರ್ತರಿಂದಲೂ ಮಾಹಿತಿ ಪಡೆದಿದ್ದೇನೆ. ಅವರ ಕ್ಷೇತ್ರ ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಕೊನೆ ಸ್ಥಾನದಲ್ಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.
‘ಕಲಬುರ್ಗಿ ರೈಲ್ವೆ ವಿಭಾಗ ಆರಂಭದ ಬೇಡಿಕೆ ನನ್ನ ಗಮನಕ್ಕೂ ಬಂದಿದೆ. ನಾನು ಈ ವಿಷಯವಾಗಿ ರೈಲ್ವೆ ಸಚಿವರೊಂದಿಗೂ ಚರ್ಚಿಸಿದ್ದೇನೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.
‘ರಾಜ್ಯದಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಕೊಲೆ ಹೆಚ್ಚುತ್ತಿವೆ. ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲಿನ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಇನ್ನೊಂದೆಡೆ ರೈತರ ಆತ್ಮಹತ್ಯೆ ಹೆಚ್ಚುತ್ತಿವೆ. ಮುಖ್ಯಮಂತ್ರಿ ಇದಕ್ಕೆ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.
‘ರಾಜ್ಯದ ನಾಲ್ಕೂ ದಿಕ್ಕುಗಳಲ್ಲಿ ನಾನು ಪ್ರವಾಸ ಕೈಗೊಂಡು, 18 ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿದ್ದೇನೆ. ನಮ್ಮ ಸಂಘಟನೆ ಅತ್ಯುತ್ತಮವಾಗಿದೆ. ಈ ಬಾರಿ ಗೆಲುವು ನಮ್ಮದೇ’ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಮುಖಂಡರಾದ ಪುರಂದರೇಶ್ವರಿ, ಕೆ.ಎಸ್.ಈಶ್ವರಪ್ಪ, ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಶಶೀಲ್ ಜಿ. ನಮೋಶಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.