ಕಲಬುರ್ಗಿ: ಅನಿಯಮಿತ ವಿದ್ಯುತ್ ಕಡಿತ ಖಂಡಿಸಿ ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಜೆಸ್ಕಾಂ ಕಚೇರಿ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ಮಾಡಿದರು. ಮುಖ್ಯ ರಸ್ತೆಯನ್ನು ತಡೆಗಟ್ಟಿ ಜೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
15 ದಿನಗಳಿಂದ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೆ ಕೆಲ ಹೊತ್ತು ಸಂಪರ್ಕ ಕೊಟ್ಟು, ಮತ್ತೆ ಕಡಿತಗೊಳಿಸುತ್ತಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಕೆಲವು ಬಡಾವಣೆಗಳಿಗೆ 24/7 ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಬಡವರು, ಸ್ಲಂ ನಿವಾಸಿಗಳು ವಾಸಿಸುವ ಬಡಾವಣೆಗಳಲ್ಲಿ ವಿದ್ಯುತ್ ಕಡಿತಗೊಳಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಜೆಸ್ಕಾಂ ಕಚೇರಿಯಲ್ಲಿ ಹವಾನಿಯಂತ್ರಕ (ಎಸಿ), ಫ್ಯಾನ್ಗಳು ಚಾಲನೆಯಲ್ಲಿವೆ. ಆದರೆ ಬಡಾವಣೆಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಇದರಿಂದಾಗಿ ಕಚೇರಿ, ಮನೆಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಐವಾನ್–ಇ–ಶಾಹಿ ಬಡಾವಣೆ, ವಿಠ್ಠಲ ನಗರ, ಗಂಗಾ ನಗರ, ಗುಲ್ಲಾಬಾಡಿ, ಜಗತ್ ವೃತ್ತ ಬಡಾವಣೆಯ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಬ್ಬೀರ್, ನವೀನಕುಮಾರ್, ಪ್ರಹ್ಲಾದ ಜೋಷಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.