ADVERTISEMENT

ವಿವಿಧ ಬೇಡಿಕೆ: ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 18 ಮೇ 2017, 9:17 IST
Last Updated 18 ಮೇ 2017, 9:17 IST

ಕಲಬುರ್ಗಿ: ಬೇಳೆಕಾಳುಗಳ ಮೇಲೆ ಶೇ 30ರಷ್ಟು ಆಮದು ಸುಂಕ ವಿಧಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌)ದ ಜಿಲ್ಲಾ ಸಮಿತಿ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಅಹೋರಾತ್ರಿ ಧರಣಿ ಆರಂಭಿಸಿದರು.

ಮೇ ಅಂತ್ಯದವರೆಗೆ ತೊಗರಿ ಖರೀದಿ ಮುಂದುವರಿಸಬೇಕು. ರೈತರ ಆದಾಯ ಹೆಚ್ಚಿಸಲು ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಪ್ರತಿ ಎಕರೆಗೆ ₹25,000 ಪರಿಹಾರ ನೀಡಬೇಕು. ಬೆಳೆ ವಿಮೆ ಮಾನದಂಡ ಬದಲಾಯಿಸಬೇಕು ಮತ್ತು ವಿಮಾ ಕಂತು ಪಾವತಿಸಿದ ಎಲ್ಲಾ ರೈತರಿಗೆ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

‘ಗೋಮಾಳ, ಗೈರಾಣಿ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು. ಮನೆ, ನಿವೇಶನಕ್ಕಾಗಿ  ಅರ್ಜಿ ಸಲ್ಲಿಸಿದ ಎಲ್ಲಾ ಬಡವರಿಗೂ ನಿವೇಶನ ಮಂಜೂರು ಮಾಡಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಎಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ವಿತರಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಉದ್ಯೋಗ ಖಾತರಿ ಯೋಜನೆಯಡಿ ದಿನಕ್ಕೆ ₹600 ಕೂಲಿ ನೀಡಬೇಕು ಮತ್ತು ಉದ್ಯೋಗ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು. ಸಮರ್ಪಕ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಘಟಕದ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಉಪಾಧ್ಯಕ್ಷರಾದ ಗೌರಮ್ಮ ಪಾಟೀಲ, ಸಿದ್ದಲಿಂಗ ಸ್ವಾಮಿ, ಕಾರ್ಯದರ್ಶಿ ಅಶೋಕ ಮ್ಯಾಗೇರಿ, ಸಹ ಕಾರ್ಯದರ್ಶಿ ಸುಭಾಷ ಹೊಸಮನಿ, ಪಾಂಡುರಂಗ ಮಾವಿನಕರ್ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.