ಕಲಬುರ್ಗಿ: ‘ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಫೆ.4ರಂದು ಬೆಳಿಗ್ಗೆ 10ಕ್ಕೆ ಜಗತ್ ವೃತ್ತದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಕ್ಯಾನ್ಸರ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಯೋಜನಾ ಮತ್ತು ನಿರ್ವಹಣಾ ಅಧಿಕಾರಿ ಗುರುರಾಜ ಕುಲಕರ್ಣಿ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಯಾನ್ಸರ್ ಮಾರಕ ಕಾಯಿಲೆಯಾಗಿದ್ದು, ಇದಕ್ಕೆ ತುತ್ತಾಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಲ್ಲಿ ಬಹುಪಾಲು ಸಾವು ಸರಿಯಾದ ಮಾಹಿತಿ ಕೊರತೆಯಿಂದ ಸೂಕ್ತ ಚಿಕಿತ್ಸೆ ಪಡೆಯದೇ ಸಂಭವಿಸುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣ ಹೆಚ್ಚಯ. ಈ ಕುರಿತು ಜನರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
‘ಗ್ರಾಮೀಣ ಪ್ರದೇಶದಲ್ಲಿ ಹಲ್ಲು ನೋವಿಗೆ ತಂಬಾಕು ತಿನ್ನುವ ರೂಢಿ ಇದೆ. ಆದರೆ, ಇದು ತಪ್ಪು. ಹಲ್ಲು ನೋವಿಗೆ ಸೂಕ್ತ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಕ್ಯಾನ್ಸರ್ನಿಂದ ಪಾರಾಗಬಹುದು. ಧೂಮಪಾನ, ತಂಬಾಕು ಸೇವನೆ ಮುಂತಾದ ದುಶ್ಚಟಗಳಿಂದ ದೂರ ಉಳಿಯಬೇಕು’ ಎಂದರು.
‘ನಗರದ ವಿವಿಧ ಪದವಿ ಕಾಲೇಜು, ಸರ್ಕಾರಿ ನರ್ಸಿಂಗ್ ಕಾಲೇಜು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಸುಮಾರು 600–700 ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸುವರು’ ಎಂದು ಹೇಳಿದರು.
ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಗುರುರಾಜ ದೇಶಪಾಂಡೆ, ಪ್ರವೀಣ ಹರನೂರ, ಶೈಲೇಶ ಶಾಸ್ತ್ರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.